ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುರುವಾರ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ಗೋಲಿಬಾರಿಗೆ ಇಬ್ಬರು ಅಮಾಯಕರು ಬಲಿಯಾಗಿದ್ದು ಆಘಾತಕಾರಿ. ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆದೇಶಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕೆಂದು ಭಾರತದ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಆಗ್ರಹಿಸಿದ್ದಾರೆ.
ಕೋಝಿಕೊಡ್ ನಲ್ಲಿ ಪತ್ರಿಕಾ ಹೇಳಿಕೆಯನ್ನು ನೀಡಿದ ಅವರು, ಪೌರತ್ವ ಕಾಯ್ದೆಯಲ್ಲಿ ಮಾಡಿರುವ ತಿದ್ದುಪಡಿಗಳು ಭಾರತದ ಸಂವಿಧಾನದ ಆಶಯಕ್ಕೆ ವಿರುದ್ಧವಾದದ್ದು ಎಂದು ನಾವು ಹೇಳುತ್ತಾ ಬಂದಿದ್ದೇವೆ. ಆ ಬಗ್ಗೆ ಭಾರತದ ಸರ್ವೋಚ್ಛ ನ್ಯಾಯಾಲಯಕ್ಕೆ ನಾವು ದೂರು ಕೂಡ ನೀಡಿದ್ದೇವೆ. ಸಂವಿಧಾನದ ಮೂಲ ಆಶಯಗಳಿಗೆ ಯಾವುದೇ ರೀತಿಯ ಬದಲಾವಣೆಗಳನ್ನು ತರುವುದು ರಾಷ್ಟ್ರವನ್ನು ಪ್ರೀತಿಸುವ ಯಾವೊಬ್ಬ ಪ್ರಜೆಯೂ ಒಪ್ಪಲಾರ. ಈ ನಿಟ್ಟಿನಲ್ಲಿ ಪ್ರತಿಭಟನೆಗಳು ಸಹಜ. ಈ ವೇಳೆ ಪೋಲೀಸರು ಬಹಳ ಜವಾಬ್ದಾರಿಯುತವಾಗಿ ವ್ಯವಹರಿಸಬೇಕು. ಯಾವುದೇ ಮುನ್ಸೂಚನೆಯಿಲ್ಲದೆ ಅಮಾಯಕರ ಮೇಲೆ ಗುಂಡಿನ ದಾಳಿ ನಡೆಸಿ ಕಗ್ಗೊಲೆ ಮಾಡಿರುವುದು ಖಂಡನೀಯ. ಕುಟುಂಬದ ಆಧಾರ ಸ್ತಂಭವಾಗಿದ್ದ ಇಬ್ಬರು ಯುವಕರು ಜೀವ ಕಳೆದುಕೊಂಡಿದ್ದು, ಅವರ ಕುಟುಂಬಕ್ಕೆ ಸರಕಾರ ಸೂಕ್ತ ಪರಿಹಾರ ನೀಡಬೇಕೆಂದು ಎ.ಪಿ. ಉಸ್ತಾದ್ ಒತ್ತಾಯಿಸಿದ್ದಾರೆ.
ಪ್ರತಿಭಟನೆ ನಡೆಸುವವರು ಶಾಂತವಾದ ರೀತಿಯಲ್ಲಿ ತಮ್ಮ ಭಾವನೆಗಳನ್ನು ಅಧಿಕೃತರ ಗಮನಕ್ಕೆ ತರುವ ಪ್ರಯತ್ನ ಮಾಡಬೇಕು. ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಹಿಂಸೆಯ ಮಾರ್ಗವನ್ನು ಅನುಸರಿಸದೆ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಎಚ್ಚರ ವಹಿಸಬೇಕೆಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.






