ಬೆಂಗಳೂರು,ಆ.10: 2019-20ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಹಾಗಾಗಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶುಭಾಶಯಗಳು ತಿಳಿಸಿದ್ಧಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಯಡಿಯೂರಪ್ಪ, ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೂ ನನ್ನ ಶುಭ ಹಾರೈಕೆಗಳು. ಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ನಿಮ್ಮ ತಂದೆ, ತಾಯಿ, ಗುರು ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯಿರಿ ಎಂದು ಆತ್ಮಸ್ಥೈರ್ಯ ತುಂಬಿದ್ಧಾರೆ.
ಇಂದು ಮಧ್ಯಾಹ್ನ 3 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂತ ಪ್ರಕಟಗೊಳ್ಳಲಿದೆ. ಈ ಬಾರಿ ವಿದ್ಯಾರ್ಥಿಗಳ ಮೊಬೈಲ್ಗೆ ಎಸ್ಎಂಎಸ್ ಮೂಲಕ ಫಲಿತಾಂಶ ಬರಲಿದೆ. ಜತೆಗೆ ವೆಬ್ಸೈಟ್ನಲ್ಲೂ ಫಲಿತಾಂಶ ಪ್ರಕಟವಾಗಲಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಗುಂಪು ಗೂಡಬಾರದು ಎಂಬ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಮೊಬೈಲ್ ಗೆ ಫಲಿತಾಂಶ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.
ಈಗಾಗಲೇ ಫಲಿತಾಂಶ ಬಂದ ಬಳಿಕ ವಿದ್ಯಾರ್ಥಿಗಳನ್ನು ಬೇರೆಯವರೊಂದಿಗೆ ಹೋಲಿಕೆ ಮಾಡಿ ನೋವಾಗುವಂತೆ ಮಾಡಬೇಡಿ. ಅವರು ಯಾವ ಕೋರ್ಸನ್ನು ಆಯ್ಕೆ ಮಾಡಿದ್ದರೂ ಆ ಕೋರ್ಸಿಗೆ ಸೇರಿಸಿ ಮುಂದೆ ಚೆನ್ನಾಗಿ ಓದಲು ಹೇಳಿ. ಒಂದು ವೇಳೆ ಅವರ ನಿರೀಕ್ಷೆಗಿಂತ ಯಾವುದಾದರೂ ವಿಷಯದಲ್ಲಿ ಕಡಿಮೆ ಅಂಕ ಬಂದಲ್ಲಿ ಮರು ಮೌಲ್ಯಮಾಪನ ಮತ್ತು ಮರು ಎಣಿಕೆಗೆ ಅವಕಾಶವಿರುತ್ತದೆ ಎಂದು ಪೋಷಕರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ತಮ್ಮ ಮಕ್ಕಳ ಫಲಿತಾಂಶ ಎಷ್ಟೇ ಆಗಿರಲಿ, ಅವರಿಗೆ ಹೇಳುವಾಗ ನಿಧಾನವಾಗಿ ಪ್ರೀತಿಯಿಂದ ತಿಳಿಸಿ. ಗಳಿಸಿದ ಅಂಕಗಳಿಗೆ ತೃಪ್ತಿ ಪಡುವಂತೆ ಮನವೊಲಿಸಿ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬಿ ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ ಸುರೇಶ್ ಕುಮಾರ್.