janadhvani

Kannada Online News Paper

ಜುಲೈ 5 ರಿಂದ ರಾಜ್ಯದಲ್ಲಿ ಅನ್‌ಲಾಕ್‌-3 ಜಾರಿ- ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ

ಬೆಂಗಳೂರು,ಜು.3: ಅನ್‌ಲಾಕ್‌-3 ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ಸಭೆ ನಡೆದಿದ್ದು, ಸೋಮವಾರದಿಂದ(ಜುಲೈ 5) ರಾಜ್ಯಾದ್ಯಂತ ಸಂಪೂರ್ಣ ಅನ್‌ಲಾಕ್‌ ಮಾಡುವ ಬಗ್ಗೆ ಈ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಸೋಂಕು ಇಳಿಕೆಯಾಗಿರುವ ಹಿನ್ನಲೆ ರಾಜ್ಯದಲ್ಲಿ ವಿಧಿಸಿದ್ದ ವಾರಾಂತ್ಯ ಕರ್ಫ್ಯೂವನ್ನು ತೆಗೆದು ಹಾಕಲಾಗಿದೆ. ರಾಜ್ಯದಲ್ಲಿ ಮೂರನೇ ಹಂತದ ಲಾಕ್ಡೌನ್ ಸಡಿಲಿಕೆ ಕುರಿತು ಅಧಿಕಾರಿಗಳು, ತಜ್ಞರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ,ರಾಜ್ಯದಲ್ಲಿ ಪ್ರತಿದಿನ ವಿಧಿಸಿದ್ದ ನೈಟ್ ಕರ್ಫ್ಯೂ ಅವಧಿ ಕಡಿತ ಮಾಡಿರುವುದಾಗಿ ತಿಳಿಸಿದರು. ಮದುವೆ ಸಮಾರಂಭಗಳಲ್ಲಿ 100 ಜನರಿಗೆ ಭಾಗಿಯಾಗಲು ಅವಕಾಶ ನೀಡಲಾಗಿದ್ದು, ಅಂತ್ಯ ಸಂಸ್ಕಾರಕ್ಕೆ 20 ಜನರು ಪಾಲ್ಗೊಳ್ಳಬಹುದು ಎಂದು ತಿಳಿಸಿದ್ದರು.

ಮೂರನೇ ಹಂತದ ಅನ್ಲಾಕ್ ವೇಳೆ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡಿಲ್ಲ. ಶಾಲಾ -ಕಾಲೇಜು ತೆರೆಯುವ ಕುರಿತು ಇನ್ನು ಯಾವುದೇ ತೀರ್ಮಾನವಾಗಿಲ್ಲ. ಪರಿಸ್ಥಿತಿ ನೋಡಿಕೊಂಡು ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು

ಸೋಮವಾರ ಬೆಳಗ್ಗೆ 5 ಗಂಟೆಯಿಂದ ಜುಲೈ 19 ರವರೆಗೆ ಈ ನಿಯಮಗಳು ಜಾರಿಯಲ್ಲಿರಲಿದೆ. ಕೊಡಗಿನಲ್ಲಿ ಸೋಂಕು ಇಳಿಕೆಯಾಗದ ಹಿನ್ನಲೆ ಅಲ್ಲಿ ಪರಿಸ್ಥಿತಿ ಸುಧಾರಣೆ ನಂತರ ಅಲ್ಲಿನ ಡಿಸಿ ತೀರ್ಮಾನ ಮಾಡುತ್ತಾರೆ. ಯಾವ ಯಾವ ಜಿಲ್ಲೆ ಗಳಲ್ಲಿ ಸಮಸ್ಯೆ ಇದೆಯೋ, ಆ ಜಿಲ್ಲೆಗಳು ಸುಧಾರಣೆ ಆಗಿ ಅನ್ ಲಾಕ್ ತೀರ್ಮಾನ ಮಾಡುವ ಬಗ್ಗೆ ಅಲ್ಲಿನ ಡಿಸಿಗಳ ವಿವೇಚನೆ ಗೆ ಬಿಡಲಾಗಿದೆ.

ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ

ಅನ್‌ಲಾಕ್‌-3 ರಲ್ಲಿ ಮಂದಿರ, ಮಸೀದಿ, ಚರ್ಚು ಮುಂತಾದ ಧಾರ್ಮಿಕ ಕೇಂದ್ರಗಳಿಗೆ ಭಕ್ತರಿಗೆ ಪ್ರವೇಶಾನುಮತಿ ನೀಡಲಾಗಿದೆ.ಆದರೆ ದೇವಸ್ಥಾನಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು ಸಾಮೂಹಿಕ ಅನ್ನದಾನ ಮುಂತಾದ ಕಾರ್ಯಕ್ರಮಗಳಿಗೆ ಅನುಮತಿಯಿಲ್ಲ.

ಸಭೆ, ಸಮಾರಂಭ, ಪ್ರತಿಭಟನೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ.

ಯಾವುದೆಲ್ಲಾ ಸಡಿಲಿಕೆ?

1. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

2. ಮಾಲ್ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

3. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.

4. ಧಾರ್ಮಿಕ ಸ್ಥಳಗಳಲ್ಲಿ ಭಕ್ತರಿಗೆ ಅವಕಾಶ ನೀಡಲಾಗಿದೆ.

5. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.

6. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

7. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

8. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.

9. ಕೊರೋನಾ ಕರ್ಫ್ಯೂ ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

10. ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.

11. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.

12. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.

13. ಪಬ್ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

14. ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.

ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಬೇಕು. ಈಗ ಜಾರಿಯಲ್ಲಿರುವ ಮಾರ್ಗಸೂಚಿ ಯನ್ನು ಜನರು ಕಡ್ಡಾಯವಾಗಿ ಪಾಲನೆ ಮಾಡಬೇಕು. ಪಾಲನೆ ಮಾಡದೆ ಮತ್ತೆ ಸೋಂಕು ಹೆಚ್ಚಾದ್ರೆ, ಈ ನಿಯಮಗಳನ್ನು ಅನಿವಾರ್ಯ ವಾಗಿ ನಿಲ್ಲಿಸಲಾಗುವುದು.

ಜನರು ಸರ್ಕಾರದ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲನೆ ಮಾಡಿ,ಸೋಂಕು ಕಡಿಮೆ ಮಾಡಲು ಸಹಕರಿಸಿದ್ದಲ್ಲಿ. ಈ ನಿಯಮ ಗಳನ್ನೇ ಮತ್ತೆ ಜುಲೈ 19 ರ ನಂತರ ವೂ ಮುಂದುವರಿಸಲಾಗುವುದು ಎಂದರು.