ಉಡುಪಿ,ಫೆಬ್ರವರಿ.13: ರಾಜ್ಯದಲ್ಲಿನ ಹಿಜಾಬ್ ಕುರಿತ ಗದ್ದಲದ ನಡುವೆ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳ ಸುತ್ತಲೂ ಸೆಕ್ಷನ್ 144 ವಿಧಿಸಲಾಗಿದೆ. ಇದು ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಫೆಬ್ರವರಿ 19 ರಂದು ಸಂಜೆ 6 ರವರೆಗೆ ಜಾರಿಯಲ್ಲಿರಲಿದೆ. ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರಿಗೆ ಪೊಲೀಸ್ ವರಿಷ್ಠಾಧಿಕಾರಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಜಿಲ್ಲೆಯ ಪ್ರೌಢಶಾಲೆಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಬೇಕು ಎಂದು ಮನವಿ ಮಾಡಿದ್ದರು.
ಉಡುಪಿಯಿಂದಲೇ ಹಿಜಾಬ್ ವಿವಾದ ಶುರುವಾಗಿತ್ತು. ಆರಂಭದಿಂದಲೂ ಹಿಜಾಬ್ ಧರಿಸಿ ಕಾಲೇಜಿಗೇ ಆಗಮಿಸುತ್ತಿದ್ದ ವಿದ್ಯಾರ್ಥಿನಿಗಳಿಗೆ ಏಕಾಏಕಿ ಪ್ರವೇಶ ನಿರಾಕರಿಸಿದ ಹಿನ್ನೆಲೆಯಲ್ಲಿ ಸಮಸ್ಯೆ ಉದ್ಭವಿಸಿತ್ತು. ನಂತರ ಕೆಲವು ಸಂಘಟನೆಗಳು ರಾಜಕೀಯ ಬೇಳೆ ಬೇಯಿಸಲು ಪ್ರತಿಭಟನೆಗಳನ್ನು ನಡೆಸಿತ್ತು. ಉರಿಯುವ ಬೆಂಕಿಗೆ ತುಪ್ಪ ಸುರಿಯುವ ರೀತಿಯಲ್ಲಿ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ವಿದ್ಯಾ ಕೇಂದ್ರಗಳಲ್ಲಿ ಸಂಘರ್ಷ ವಾತಾವರಣ ಸೃಷ್ಟಿಯಾಗಿತ್ತು. ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ವಿದ್ಯಾ ದೇಗುಲಕ್ಕೆ ಕಲ್ಲೆಸೆದು, ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿ, ಚೂರಿಯಿಂದ ಇರಿದು, ಬಿಗು ವಾತಾವರಣ ಸೃಷ್ಟಿಯಾದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಯ್ತು.
ಹಿಜಾಬ್ ವಿವಾದವು ಹೈಕೋರ್ಟ್ ಮೆಟ್ಟಲೇರಿದ್ದು, ಈ ಪ್ರಕರಣದಲ್ಲಿ ಅಂತಿಮ ತೀರ್ಪಿನವರೆಗೆ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಉಡುಪುಗಳನ್ನು ಧರಿಸದಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಇದನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗಿದೆ.ಈ ಮಧ್ಯೆ, ಕರ್ನಾಟಕದಲ್ಲಿ ಏನಾಗುತ್ತಿದೆ ಎಂಬುದನ್ನು ಗಮನಿಸುತ್ತಿದ್ದೇವೆ ಮತ್ತು ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದನ್ನು ರಾಷ್ಟ್ರೀಯ ಮಟ್ಟದ ಸಮಸ್ಯೆಯನ್ನಾಗಿಸಬೇಡಿ. ಸೂಕ್ತ ಸಮಯದಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸುತ್ತದೆ ಎಂದು ತಿಳಿಸಿದೆ.







