janadhvani

Kannada Online News Paper

ಶಿವಮೊಗ್ಗದಲ್ಲಿ ಯುವಕನ ಹತ್ಯೆ-ತಪ್ಪಿತಸ್ಥರನ್ನು ಶೀಘ್ರ ಬಂಧಿಸಲಾಗುವುದು- ಸಿಎಂ

ಯಾರೂ ಕೂಡ ಭಾವೋದ್ವೇಗಕ್ಕೆ ಒಳಗಾಗಬಾರದು. ಶಾಂತಿ ಕಾಪಾಡಬೇಕು.

ಬೆಂಗಳೂರು,ಫೆ.21- ಶಿವಮೊಗ್ಗದಲ್ಲಿ ಯುವಕನ ಹತ್ಯೆಯಾಗಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ಪ್ರಾರಂಭವಾಗಿದ್ದು, ತಪ್ಪಿತಸ್ಥರನ್ನು ಶೀಘ್ರ ಬಂಧಿಸಿ ಶಿಕ್ಷೆಯಾಗುವಂತೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ನಮ್ಮ ಸಂಘಟನೆಯ ಹರ್ಷ ಎಂಬ ಕಾರ್ಯಕರ್ತನ ಕಗ್ಗೊಲೆಯಾಗಿದೆ. ಈಗಾಗಲೇ ತನಿಖೆ ಪ್ರಾರಂಭವಾಗಿದ್ದು, ಹಲವು ಸುಳಿವುಗಳು ಸಿಕ್ಕಿವೆ. ಶೀಘ್ರದಲ್ಲೇ ಆರೋಪಿಗಳ ಬಂಧನವಾಗಲಿದೆ.

ಶಿವಮೊಗ್ಗದಲ್ಲಿ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲು ಅಕಾರಿಗಳಿಗೆ ಸೂಚಿಸಲಾಗಿದೆ. ನಗರ ಹಾಗೂ ಸುತ್ತಮುತ್ತಲ ಜನರಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ. ನ್ಯಾಯಯುತವಾಗಿ ಪ್ರಕರಣದ ತನಿಖೆ ನಡೆಸಲಾಗುತ್ತದೆ.

ಯಾರೂ ಕೂಡ ಭಾವೋದ್ವೇಗಕ್ಕೆ ಒಳಗಾಗಬಾರದು. ಶಾಂತಿ ಕಾಪಾಡಬೇಕು. ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ತರ್ಕ ಬಿಟ್ಟು ಮಾತನಾಡುತ್ತಾರೆ. ತನಿಖೆಯ ನಂತರ ಎಲ್ಲ ಸತ್ಯಾಂಶ ಬೆಳಕಿಗೆ ಬರಲಿದೆ ಎಂದು ಹೇಳಿದರು.