ಉಡುಪಿ: ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ನಿಷೇಧಿಸಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ಹನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನ್ಯಾಯಾಲಯದಲ್ಲಿ ಮುಂದುವರೆದಿದ್ದು, ಈ ನಡುವಲ್ಲೇ ವಿದ್ಯಾರ್ಥಿನಿ ಹಾಜರಾ ಶಿಫಾ ಅವರ ಪೋಷಕರು ನಡೆಸುತ್ತಿರುವ ಮಲ್ಪೆಯ ರೆಸ್ಟೋರೆಂಟ್ ಮೇಲೆ ಸೋಮವಾರ ರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಹಾಜ್ರಾ ಸಹೋದರ ಸೈಫ್ ಮೇಲೆ ಹಲ್ಲೆ ನಡೆದಿದ್ದು, ಅವರನ್ನು ಉಡುಪಿಯ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಹೋಟೆಲ್ನ ಕಿಟಕಿ ಗಾಜುಗಳನ್ನು ಒಡೆದು ಹಾಕಲಾಗಿದೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಿಫಾ ಅವರ ತಂದೆ ಹೈದರ್ ಅಲಿ ಅವರು ಮಲ್ಪೆ ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದು, ಈ ಹೋಟೆಲ್’ಗೆ ತೆರಳಿರುವ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆ ವೇಳೆ ಶಿಫಾ ಅವರ ಸಲಹೋದರ ಸೈಫ್ (20) ಅವರು ಗಾಯಗೊಂಡಿದ್ದಾರೆಂದು ಮೂಲಗಳು ತಿಳಿಸಿವೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಮಲ್ಪೆ ಪೊಲೀಸರು ಸ್ಥಳದಲ್ಲಿ ನೆರೆದಿದ್ದ ಜನರನ್ನು ಚದುರಿಸಿದ್ದಾರೆ. ಇನ್ನು ಘಟನೆ ಸಂಬಂಧ ಶಿಫಾ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನ್ನ ಹಕ್ಕಿಗಾಗಿ ಧನಿ ಎತ್ತುವುದು ತಪ್ಪೇ, ಸಂಘ ಪರಿವಾರದ ಗೂಂಡಾಗಳ ವಿರುದ್ಧ ಪೊಲೀಸರು ಕಾನೂನು ಕ್ರಮ ಜರುಗಿಸಬೇಕು’ ಎಂದು ಹಿಜಾಬ್ ಪರ ಹೋರಾಟ ಮಾಡುತ್ತಿರುವ ವಿದ್ಯಾರ್ಥಿನಿ ಹಾಜ್ರಾ ಶಿಫಾ ಟ್ವಿಟ್ ಮಾಡಿದ್ದಾರೆ.
ತನ್ನ ಸಹೋದರ ಮೇಲೆ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿದೆ. ನನ್ನ ಹಕ್ಕಾಗಿರುವ ಹಿಜಾಬ್ ಪರವಾಗಿ ನಾನು ನಿಂತಿರುವ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆ ನಮ್ಮ ಆಸ್ತಿಪಾಸ್ತಿಗಳು ಹಾನಿಗೊಳಗಾಗಿವೆ. ನಾನೇಕೆ ನನ್ನ ಹಕ್ಕನ್ನು ಕೇಳಬಾರದು? ಮುಂದಿನ ಬಲಿಪಶು ಯಾರಾಗಲಿದ್ದಾರ? ಸಂಘ ಪರಿವಾರದ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ನಾನು ಆಗ್ರಹಿಸುತ್ತೇನೆಂದು ಹೇಳಿದ್ದಾರೆ.







