ನವದೆಹಲಿ,ಮಾ.10: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದ್ದು, ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಿಂದ ದೂರ ಉಳಿಯೋದು ಖಚಿತವಾಗಿದೆ. ಇತ್ತ ಕಾಂಗ್ರೆಸ್ ಕಾರ್ಯಕರ್ತರು ನವದೆಹಲಿಯಲ್ಲಿ ಪ್ರತಿಭಟನೆಗೆ ಇಳಿದಿದ್ದು, ಇವಿಎಂ ದುರ್ಬಳಕೆಯಾಗಿದೆ ಎಂದು ಆರೋಪ ಮಾಡಿದ್ದಾರೆ.
ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಂದುವರಿದ್ದು, ಈ ನಡುವೆಯೇ ದೆಹಲಿಯಲ್ಲಿರೋ ಪಕ್ಷದ ಕಚೇರಿಯ ಎದುರು ಇವಿಎಂ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತ ಎಣಿಕೆ ಟ್ರೆಂಡಿಂಗ್ನಲ್ಲಿ ಎಲ್ಲಾ ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಹಿಂದುಳಿದಿದೆ. ಉತ್ತರಾಖಂಡ್, ಮಣಿಪುರ, ಗೋವಾ ಹಾಗೂ ಉತ್ತರ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಪಡೆದಿದ್ದು, ಪಂಜಾಬ್ನಲ್ಲಿ ಎಎಪಿ ಪಕ್ಷ ಸ್ಪಷ್ಟ ಬಹುಮತ ಪಡೆಯುವತ್ತ ಹೆಜ್ಜೆ ಇಟ್ಟಿದೆ.







