janadhvani

Kannada Online News Paper

ಹಿಜಾಬ್ ವಿವಾದ: ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್

ಹೆಚ್ಚಿನ ವಿವರಣೆ ಕೇಳಿ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ

ನವದೆಹಲಿ:ಕರ್ನಾಟಕದಲ್ಲಿನ ಹಿಜಾಬ್ ವಿವಾದ ಕುರಿತ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿ (Supreme court) ಸುಪ್ರೀಂ ಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ.

ಹಿಜಾಬ್ ಮುಸ್ಲಿಂ ಧರ್ಮೀಯರಲ್ಲಿ ಆಚರಣೆಯ ಕಡ್ಡಾಯ ಭಾಗವಲ್ಲ ಎಂದು ಕಳೆದ ಫೆಬ್ರವರಿಯಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಹಲವು ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಪಟ್ಟಂತೆ ಇದೇ ಸಂದರ್ಭದಲ್ಲಿ ಹೆಚ್ಚಿನ ವಿವರಣೆ ಕೇಳಿ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ.

ರಾಜ್ಯ ಸರ್ಕಾರ ಪದವಿ ಪೂರ್ವ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿ ಕಾನೂನು ಹೊರಡಿಸಿತ್ತು. ಇಂದು ಸುಪ್ರೀಂ ಕೋರ್ಟ್ ಮುಂದೆ ವಾದ ಮಂಡಿಸಿದ ರಾಜ್ಯ ಸರ್ಕಾರ ಪರ ಅಡ್ವೊಕೇಟ್, ಮುಂದಿನ ಸೋಮವಾರವೇ ಹಿಜಾಬ್ ವಿಚಾರಣೆಯನ್ನು ಕೈಗೆತ್ತಿಕೊಳ್ಳಬೇಕೆಂದು ಮನವಿ ಮಾಡಿದೆ.

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸದಂತೆ ಸರ್ಕಾರ ಆದೇಶ ನೀಡಿದ್ದಕ್ಕೆ ರಾಜ್ಯಾದ್ಯಂತ ಭಾರೀ ಗಲಾಟೆ, ಪ್ರತಿಭಟನೆಗಳು ನಡೆದಿದ್ದವು. ಹಲವು ವಿದ್ಯಾರ್ಥಿನಿಯರು ಪರೀಕ್ಷೆಯನ್ನೂ ಬಹಿಷ್ಕರಿಸಿದ್ದರು. ಈ ಪ್ರಕರಣದ ಕುರಿತು ಕಳೆದ ಮಾರ್ಚ್ 15ರಂದು ಕರ್ನಾಟಕ ಹೈಕೋರ್ಟ್ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳಲ್ಲಿ ಯೂನಿಫಾರ್ಮ್ ಮಾತ್ರ ಧರಿಸಬೇಕು, ಯಾವುದೇ ಧರ್ಮ ಸೂಚಕ ಉಡುಪನ್ನು ಧರಿಸುವಂತಿಲ್ಲ ಎಂದು ತೀರ್ಪು ನೀಡಿತ್ತು. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧದ ಬಗ್ಗೆ ಕರ್ನಾಟಕ (High Court) ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.

2022ರ ಫೆಬ್ರವರಿಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಕುರಿತ ವಿವಾದ ಹುಟ್ಟಿಕೊಂಡಿತ್ತು. ಹಿಜಾಬ್ ಪರ ವಿರೋಧ ಚರ್ಚೆ ಆರಂಭವಾದ ಬಳಿಕ ರಾಜ್ಯ ಮಾತ್ರವಲ್ಲದೆ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆದಿದ್ದವು.

ಹಿಜಾಬ್ ಗೆ ಅವಕಾಶ ನೀಡುವಂತೆ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ಮಾರ್ಚ್ 15ರಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ಹೈಕೋರ್ಟ್ ವಜಾಗೊಳಿಸಿತ್ತು. ಹಿಜಾಬ್ ಇಸ್ಲಾಂ ಧರ್ಮದ ಅಡಿಯಲ್ಲಿ ಅತ್ಯಗತ್ಯವಾದ ಆಚರಣೆಯಲ್ಲ. ಜೊತೆಗೆ ಇದು ಭಾರತದ ಸಂವಿಧಾನದ 25 ನೇ ಪರಿಚ್ಛೇದದ ವ್ಯಾಪ್ತಿಗೆ ಬರುವುದಿಲ್ಲ ಎಂದು ತನ್ನ ತೀರ್ಪನ್ನು ಹೇಳಿತ್ತು.

ಟಿ.ಸಿ. ಪಡೆದ 145 ವಿದ್ಯಾರ್ಥಿನಿಯರು: ಕಾಲೇಜುಗಳಲ್ಲಿ ಹಿಜಾಬ್‌ ವಿವಾದ ಆರಂಭವಾದ ಬಳಿಕ ಹಿಜಾಬ್‌ಗೆ ಅವಕಾಶ ಇಲ್ಲವೆಂದು ದ.ಕ., ಉಡುಪಿಯ ಶೇ.16ರಷ್ಟುಮುಸ್ಲಿಂ ವಿದ್ಯಾರ್ಥಿನಿಯರು ತಾವು ಕಲಿಯುತ್ತಿದ್ದ ಕಾಲೇಜುಗಳಿಂದ ವರ್ಗಾವಣೆ ಪ್ರಮಾಣ ಪತ್ರ(ಟಿ.ಸಿ.) ಪಡೆದುಕೊಂಡಿದ್ದಾರೆ.

ಉಭಯ ಜಿಲ್ಲೆಗಳಲ್ಲಿ ಸುಮಾರು 900 ಡಿಗ್ರಿ ಓದುತ್ತಿರುವ ಮುಸ್ಲಿಂ ವಿದ್ಯಾರ್ಥಿಗಳಲ್ಲಿ 145ರಷ್ಟುವಿದ್ಯಾರ್ಥಿಗಳು ಟಿಸಿ ಪಡೆದುಕೊಂಡಿದ್ದಾರೆ ಎಂದು ಆರ್‌ಟಿಐ ಪ್ರಶ್ನೆಗೆ ಶಿಕ್ಷಣ ಇಲಾಖೆ ಉತ್ತರ ನೀಡಿದೆ. ಇದರಲ್ಲಿ ಸರ್ಕಾರಿ ಕಾಲೇಜುಗಳಿಂದ ಶೇ.34ರಷ್ಟುವಿದ್ಯಾರ್ಥಿನಿಯರು ಟಿಸಿ ಪಡೆದುಕೊಂಡಿದ್ದರೆ, ಅನುದಾನಿತ ಕಾಲೇಜುಗಳಿಂದ ಶೇ.13ರಷ್ಟುವಿದ್ಯಾರ್ಥಿನಿಯರು ಟಿಸಿ ಪಡೆದಿದ್ದಾರೆ.

ಉಡುಪಿಯ ಕಾಲೇಜಿನಲ್ಲಿ ಹಿಜಾಬ್‌ ವಿವಾದ ಆರಂಭವಾದ ಬಳಿಕ ದಕ್ಷಿಣ ಕನ್ನಡದಲ್ಲೂ ಹಲವು ಕಾಲೇಜುಗಳಲ್ಲಿ ವಿವಾದ ಉದ್ಭವಿಸಿತ್ತು. ಅದರ ಬೆನ್ನಲ್ಲೇ ವಿದ್ಯಾರ್ಥಿನಿಯರು ಟಿ.ಸಿ. ಪಡೆದುಕೊಂಡಿದ್ದಾರೆ. ಹಿಜಾಬ್‌ಗೆ ಅವಕಾಶ ಇರುವ ಖಾಸಗಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮುಂದುವರಿಸುವ ಇಂಗಿತವನ್ನು ಅನೇಕ ವಿದ್ಯಾರ್ಥಿನಿಯರು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ...