ಬೆಂಗಳೂರು: ‘ಸೌದಿ ಅರೇಬಿಯಾದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯೊಬ್ಬರ ಪ್ರಕರಣದಲ್ಲಿ ತನಿಖೆಗೆ ಸೂಕ್ತ ಸಹಕಾರ ನೀಡುತ್ತಿಲ್ಲ ಎಂಬ ಮಂಗಳೂರು ಪೊಲೀಸರ ಆಕ್ಷೇಪವನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ ಮತ್ತು ಭಾರತದಲ್ಲಿ ಫೇಸ್ಬುಕ್ ಕಾರ್ಯಚರಣೆ ಬಂದ್ ಮಾಡಲು ಆದೇಶ ಹೊರಡಿಸಬೇಕಾಗುತ್ತದೆ’ ಎಂದು ಹೈಕೋರ್ಟ್ ಕಠಿಣ ಎಚ್ಚರಿಕೆ ನೀಡಿದೆ.
ಈ ಸಂಬಂಧ ಮಂಗಳೂರಿನ ಬಿಕರ್ನಕಟ್ಟೆ ನಿವಾಸಿ ಶೈಲೇಶ್ ಕುಮಾರ ಪತ್ನಿ ಕವಿತಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
‘ಫೇಸ್ಬುಕ್ ಸಂಸ್ಥೆಯು ಒಂದು ವಾರದಲ್ಲಿ ಘಟನೆಯ ಕುರಿತು ಸೂಕ್ತ ಮಾಹಿತಿ ಒಳಗೊಂಡ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಭಾರತೀಯ ಪ್ರಜೆ ಸುಳ್ಳು ಪ್ರಕರಣದಲ್ಲಿ ವಿದೇಶದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಆತನ ಬಿಡುಗಡೆಗೆ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಕೇಂದ್ರ ಸರ್ಕಾರ ಅಗತ್ಯ ಮಾಹಿತಿ ನೀಡಬೇಕು. ಮಂಗಳೂರು ಪೊಲೀಸರೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮರ್ಪಕ ತನಿಖೆ ಕೈಗೊಂಡು ವರದಿ ಸಲ್ಲಿಸಬೇಕು’ ಎಂದು ನ್ಯಾಯಪೀಠ ನಿರ್ದೇಶಿಸಿದೆ. ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಲಾಗಿದೆ.
ಏನಿದು ಪ್ರಕರಣ?
ಮಂಗಳೂರಿನ ಬಿಕರ್ನಕಟ್ಟೆಯ 45 ವರ್ಷದ ಶೈಲೇಶ್ ಕುಮಾರ್ ಹಲವು ವರ್ಷಗಳಿಂದ ಸೌದಿ ಅರೇಬಿಯಾದ ಅಲ್ ಕುಬೆ ಎಂಬಲ್ಲಿ ಉದ್ಯೋಗಿಯಾಗಿದ್ದಾರೆ. ಪತ್ನಿ ಮತ್ತು ಮಕ್ಕಳು ಬಿಕರನಕಟ್ಟೆಯಲ್ಲಿ ವಾಸ ಮಾಡುತ್ತಿದ್ದಾರೆ.
ಶೈಲೇಶ್ 2019ರಲ್ಲಿ ಕೇಂದ್ರ ಸರ್ಕಾರ ರೂಪಿಸಿದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ (ಎನ್ಆರ್ಸಿ) ಬೆಂಬಲಿಸಿ ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದರು. ಇದರಿಂದ ಅವರಿಗೆ ಅನಾಮಿಕರಿಂದ ಬೆದರಿಕೆ ಬಂದಿತ್ತು. ಹಾಗಾಗಿ, ಅವರು ತಮ್ಮ ಫೇಸ್ಬುಕ್ ಖಾತೆಯನ್ನು ರದ್ದುಪಡಿಸಿದ್ದರು.
ಏತನ್ಮಧ್ಯೆ ಶೈಲೇಶ್ ಕುಮಾರ್ ಹೆಸರಿನಲ್ಲಿ 2020ರ ಫೆಬ್ರುವರಿಯಲ್ಲಿ ಅನಾಮಧೇಯ ವ್ಯಕ್ತಿಗಳು ನಕಲಿ ಫೇಸ್ಬುಕ್ ಖಾತೆ ತೆರೆದು ಸೌದಿ ಅರೇಬಿಯಾದ ದೊರೆ, ಅವರ ಧರ್ಮದ ಹೆಸರಿನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಇದು ತಮ್ಮ ಗಮನಕ್ಕೆ ಬಂದಕೂಡಲೇ ಶೈಲೇಶ್ ತಮ್ಮ ಸ್ನೇಹಿತರಿಗೆ ಮತ್ತು ಮಂಗಳೂರಿನ ಸಂಬಂಧಿಕರಿಗೆ ತಿಳಿಸಿದ್ದರು.
ಇದೇ ವೇಳೆ ಸೌದಿ ಪೊಲೀಸರು ಶೈಲೇಶ್ ಅವರನ್ನು ಬಂಧಿಸಿದ್ದರು. ಈ ಕುರಿತಂತೆ ಮಂಗಳೂರಿನಲ್ಲಿ ಪತ್ನಿ ಕವಿತಾ ದೂರು ದಾಖಲಿಸಿದ್ದರು. ತನಿಖೆ ಕೈಗೆತ್ತಿಕೊಂಡಿದ್ದ ಮಂಗಳೂರು ಪೊಲೀಸರು, ಫೇಸ್ಬುಕ್ ಸಂಸ್ಥೆಗೆ ಪತ್ರ ಬರೆದು, ಶೈಲೇಶ್ ಹೆಸರಿನಲ್ಲಿ ನಕಲಿ ಖಾತೆ ತೆರೆದವರ ಮಾಹಿತಿ ನೀಡುವಂತೆ ಕೋರಿದ್ದರು. ಅಂತೆಯೇ, ‘ನಿರಪರಾಧಿಯಾದ ನನ್ನ ಗಂಡನನ್ನು ಸೌದಿ ಜೈಲಿನಿಂದ ಬಿಡಿಸಲು ಕ್ರಮ ಜರುಗಿಸಿ’ ಎಂದು ಕೋರಿ ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸಿದ್ದರು.
ಈ ಮನವಿ ಫಲ ನೀಡದ ಕಾರಣ ಅವರು, ‘ಪೊಲೀಸರು ನಿಧಾನಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ’ ಎಂದು ಆಕ್ಷೇಪಿಸಿ 2021ರಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಈ ಹಿಂದೆ ನೀಡಿದ್ದ ನಿರ್ದೇಶನದ ಅನುಸಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಹಾಗೂ ಪ್ರಕರಣದ ತನಿಖಾಧಿಕಾರಿ ಬುಧವಾರ ವಿಚಾರಣೆಗೆ ಖುದ್ದು ಹಾಜರಾಗಿದ್ದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ