ಬೆಂಗಳೂರು: ಸುನ್ನೀ ಸ್ಟೂಡೆಂಟ್ ಫೆಡರೇಶನ್ (ಎಸ್ಸೆಸ್ಸೆಫ್) ಇದರ ಐವತ್ತನೇ ವರ್ಷಾಚರಣೆಯ ಪ್ರಯುಕ್ತ ಗೋಲ್ಡನ್ ಫಿಫ್ಟಿ ಮಹಾ ಸಮ್ಮೇಳನ ಹಾಗೂ ಎಸ್ಸೆಸ್ಸೆಫ್ ರಾಷ್ಟ್ರೀಯ ಸಮಿತಿಯು ನಡೆಸುತ್ತಿರುವ ಕಾಶ್ಮೀರದಿಂದ ಆರಂಭಗೊಂಡಿರುವ ಸಂವಿಧಾನ ಯಾತ್ರೆಯ ಸಮಾರೋಪ ಸಮಾರಂಭವು ಇಂದು ಬೆಂಗಳೂರು ಮಹಾನಗರದ ಶ್ರೀ ಕೃಷ್ಣ ವಿಹಾರ ಅರಮನೆ ಮೈದಾನದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಗಾರರಾಗಿ ಆಗಮಿಸುವ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ. ಪಿ. ಅಬೂಬಕರ್ ಮುಸ್ಲಿಯಾರ್ ಅವರನ್ನು ಕರ್ನಾಟಕ ಸರ್ಕಾರವು ಸರ್ಕಾರಿ ಅತಿಥಿಯಾಗಿ ಘೋಷಿಸಿದೆ.
ಭಾನುವಾರ ಬೆಳಗ್ಗೆ 8 ಗಂಟೆಗೆ ಬೆಂಗಳೂರಿಗೆ ಆಗಮಿಸುವ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರು ಸೋಮವಾರ ಸಂಜೆ 6 ಗಂಟೆಗೆ ಕಾಂತಪುರಂಗೆ ಮರಳಲಿದ್ದಾರೆ. ಎರಡು ದಿನಗಳ ಕಾಲ ಕರ್ನಾಟಕ ಸರ್ಕಾರದ ಅತಿಥಿಯಾಗಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾಂತಪುರಂ ಅವರಿಗೆ ಸರ್ಕಾರಿ ಅತಿಥಿ ಗೃಹ, ಸರ್ಕಾರಿ ವಾಹನಗಳು, ಸರ್ಕಾರಿ ಭದ್ರತೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ. ಕಳೆದ ತಿಂಗಳು 13 ರಂದು ಕಾಶ್ಮೀರದಿಂದ ಆರಂಭವಾದ SSF ಸಂವಿಧಾನ ಯಾತ್ರೆಯು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಎಸ್ಸೆಸ್ಸೆಫ್ ಗೋಲ್ಡನ್ ಫಿಫ್ಟಿ ವಿದ್ಯಾರ್ಥಿಗಳ ಸಮಾವೇಶದೊಂದಿಗೆ ಮುಕ್ತಾಯಗೊಳ್ಳಲಿದೆ.
ಬೆಳಿಗ್ಗೆ 10ಕ್ಕೆ ಎಸ್ಎಸ್ಎಫ್ ಪ್ರತಿನಿಧಿ ಸಮಾವೇಶ ನಡೆಯಲಿದ್ದು, ರಾಜ್ಯದ 7 ಸಾವಿರ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಸಂಜೆ ನಡೆಯೂವ ಸಮಾರೋಪ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಕರ್ನಾಟಕದ ಉಲಮಾ ಒಕ್ಕೂಟದ ಅಧ್ಯಕ್ಷ ಝೈನುಲ್ ಉಲುಮಾ ಮಾಣಿ ಉಸ್ತಾದ್ ಅಧ್ಯಕ್ಷತೆ ವಹಿಸಲಿದ್ದಾರೆ. ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಅಬೂಬಕ್ಕರ್ ಮುಸ್ಲಿಯಾರ್ ಮುಖ್ಯ ಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಸಯ್ಯಿದ್ ಫಝಲ್ ಅಲ್ ಬುಖಾರಿ ಕೂರತ್, ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್,ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್, ಗೃಹಮಂತ್ರಿ ಜಿ. ಪರಮೇಶ್ವರ್, ವಕ್ಫ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಬಿ. ಝಡ್. ಝಮೀರ್ ಅಹ್ಮದ್ ಖಾನ್, ಜೆಡಿಎಸ್ ಅಧ್ಯಕ್ಷ – ಸಿ.ಎಂ. ಇಬ್ರಾಹಿಂ, ತಮಿಳುನಾಡು ಸರಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಗಿಂಗಿ ಮಸ್ತಾನ್, ಕೇರಳದ ಸಂಸದ ಟಿ.ಎನ್. ಪ್ರತಾಪನ್ ಮುಂತಾದ ರಾಜಕೀಯ ಮುಖಂಡರು ಹಾಗೂ ಉಲಮಾ, ಉಮರಾ ನಾಯಕರು, ಸಾಮಾಜಿಕ ಮತ್ತು ಶೈಕ್ಷಣಿಕ ಧುರೀಣರು ಬಾಗವಹಿಸಲಿದ್ದಾರೆ.







