janadhvani

Kannada Online News Paper

ವಕ್ಫ್ ತಿದ್ದುಪಡಿ ಕಾಯ್ದೆ: ತಡೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

ಈ ಕಾನೂನು, ಸಂವಿಧಾನವು ಖಾತರಿಪಡಿಸಿದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ.

ನವದೆಹಲಿ | ವಕ್ಫ್ ತಿದ್ದುಪಡಿ ಕಾಯ್ದೆಗೆ ತಡೆ ನೀಡುವಂತೆ ಕೋರಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ದೇಶಾದ್ಯಂತ ಪ್ರತಿಭಟನೆಗಳನ್ನು ಘೋಷಿಸಿದ ನಂತರ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತು. ಮಂಡಳಿಯ ಪರವಾಗಿ ಪ್ರಧಾನ ಕಾರ್ಯದರ್ಶಿ ಮೌಲಾನಾ ಮುಹಮ್ಮದ್ ಫಝಲುರಹೀಂ ಮುಜದ್ದಿದಿ ಅವರು ಅರ್ಜಿಯನ್ನು ಸಲ್ಲಿಸಿದ್ದಾರೆ.

ತಿದ್ದುಪಡಿಗಳು, ಏಕಪಕ್ಷೀಯ ಮತ್ತು ತಾರತಮ್ಯದಿಂದ ಕೂಡಿವೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಈ ಕಾನೂನು, ಸಂವಿಧಾನವು ಖಾತರಿಪಡಿಸಿದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಆದ್ದರಿಂದ, ನ್ಯಾಯಾಲಯವು ಮಧ್ಯಪ್ರವೇಶಿಸಿ ತಿದ್ದುಪಡಿ ಕಾಯ್ದೆಗೆ ತಡೆ ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.

ಮಸೂದೆಗೆ ಸಹಿ ಹಾಕುವ ಮೊದಲು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ನಾಯಕರು ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಮಸೂದೆಯ ಬಗ್ಗೆ ತಮ್ಮ ಕಳವಳಗಳನ್ನು ನೇರವಾಗಿ ತಿಳಿಸಲು ಸಮಯ ಕೋರಿದ್ದರು, ಆದರೆ ಅವಕಾಶ ಲಭಿಸಿರಲಿಲ್ಲ. ರಾಷ್ಟ್ರಪತಿಗಳು ಮಸೂದೆಗೆ ಸಹಿ ಹಾಕಿದ ನಂತರ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಈಗ ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದೆ.

ವಿರೋಧದ ನಡುವೆಯೂ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ವಕ್ಫ್ ತಿದ್ದುಪಡಿ ಮಸೂದೆ, ಶನಿವಾರ ಮಧ್ಯರಾತ್ರಿ ರಾಷ್ಟ್ರಪತಿಗಳ ಅಂಕಿತದೊಂದಿಗೆ ಕಾನೂನಾಗಿ ಮಾರ್ಪಟ್ಟಿತು.