janadhvani

Kannada Online News Paper

ಗುಂಪು ಹತ್ಯೆ ಪ್ರಕರಣದಲ್ಲಿ ಕರ್ತವ್ಯಲೋಪ- ಇನ್ಸ್‌ಪೆಕ್ಟರ್ ಸಹಿತ ಮೂವರು ಪೊಲೀಸರು ಸಸ್ಪೆಂಡ್

ರಾಜ್ಯದ ಗೃಹ ಸಚಿವರು ಆರೋಪಿಗಳ ಹೇಳಿಕೆಯನ್ನು ಅವಲಂಬಿಸಿ "ಪಾಕಿಸ್ತಾನ್ ಝಿಂದಾಬಾದ್" ಕೂಗಿರುವುದಕ್ಕೆ ಗುಂಪು ಹತ್ಯೆ ನಡೆದಿದೆ ಎನ್ನುವ ಮೂಲಕ ವಿವಾದ ಸೃಷ್ಟಿಸಿದ್ದರು.

ಮಂಗಳೂರು: ಇಲ್ಲಿನ ಹೊರವಲಯದ ಕುಡುಪು ಎಂಬಲ್ಲಿ ಮುಸ್ಲಿಂ ಯುವಕನನ್ನು ಗುಂಪು ಹತ್ಯೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಶಿವಕುಮಾ‌ರ್ ಕೆ ಆರ್ ಸಹಿತ ಮೂವರನ್ನು ಅಮಾನತುಗೊಳಿಸಿರುವ ಬಗ್ಗೆ ವರದಿಯಾಗಿದೆ.

ಕುಡುಪು ಎಂಬಲ್ಲಿ ಕಳೆದ ರವಿವಾರ ಎ.27ರಂದು ಕ್ರಿಕೆಟ್‌ ಪಂದ್ಯಾಟ ನಡೆಯುತ್ತಿದ್ದ ಸ್ಥಳಕ್ಕೆ ಬಂದಿದ್ದ ಕೇರಳ ಮೂಲದ ಅಶ್ರಫ್ ಎಂಬವರನ್ನು ದುಷ್ಕರ್ಮಿಗಳ ಗುಂಪು ಥಳಿಸಿ ಭೀಕರವಾಗಿ ಹತ್ಯೆಗೈದಿದ್ದರು. ಪ್ರಕರಣ ಬೆಳಕಿಗೆ ಬಂದ ನಂತರವೂ ಪೊಲೀಸ್‌ ಇಲಾಖೆಯು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬ ಆಕ್ಷೇಪ ಸಾರ್ವಜನಿಕ ವಲಯದಿಂದ ವ್ಯಕ್ತವಾಗಿತ್ತು. ಆ ಬಳಿಕ ಎಚ್ಚೆತ್ತುಕೊಂಡ ಪೊಲೀಸರು 20 ಮಂದಿ ಆರೋಪಿಗಳನ್ನು ಬಂಧಿಸಿದ್ದರು.

ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸ್‌ ಇನ್ಸೆಕ್ಟರ್ ಶಿವಕುಮಾ‌ರ್ ಕೆ ಆರ್, ಹೆಡ್‌ಕಾನ್‌ಸ್ಟೇಬಲ್‌ ಚಂದ್ರ ಪಿ. ಮತ್ತು ಪೊಲೀಸ್‌ ಕಾನ್‌ಸ್ಟೇಬಲ್ ಯಲ್ಲಾಲಿಂಗ ಅವರನ್ನು ಅಮಾನತುಗೊಳಿಸಲಾಗಿದೆ.

ಎ.27 ರಂದು ಕುಡುಪುವಿನ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ಸಮಯ ಓರ್ವ ಅಪರಿಚಿತ ವ್ಯಕ್ತಿಗೆ, ಆಟಗಾರರು ಮತ್ತು ಅಲ್ಲಿ ನರೆದಿದ್ದ ಪ್ರೇಕ್ಷಕರು ಗುಂಪು ಹಲ್ಲೆ ನಡೆಸುತ್ತಿದ್ದ ಕುರಿತು ದೀಪಕ್ ಎಂಬುವರು ಪೊಲೀಸರಿಗೆ ಪೋನ್ ಕರೆ ಮಾಡಿ ತಿಳಿಸಿದ್ದರು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟ‌ರ್, ಸಿಬ್ಬಂದಿಗಳಿಗೆ ಮಾಹಿತಿ ಬಂದಿತ್ತು. ಘಟನೆಯ ಬಗ್ಗೆ ಎಲ್ಲಾ ಮಾಹಿತಿ ಇದ್ದರೂ ಗುಂಪು ಹತ್ಯೆಯ ಬಗ್ಗೆ ಮೇಲಾಧಿಕಾರಿಗಳಿಗೆ ತಿಳಿಸಿಲ್ಲ ಎನ್ನಲಾಗಿದೆ.

ಹಾಗಾಗಿ ಗುಂಪು ಹತ್ಯೆ ಪ್ರಕರಣವು ಮೊದಲು ಯುಡಿಆ‌ರ್ ಪ್ರಕರಣವಾಗಿ, ಬಳಿಕ ಗುಂಪು ಹತ್ಯೆ ಪ್ರಕರಣವಾಗಿ ದಾಖಲಾಯಿತು.ಗುಂಪು ಹತ್ಯೆಯ ಬಗ್ಗೆ ಮಾಹಿತಿ ತಿಳಿದಿದ್ದರೂ ಮೇಲಾಧಿಕಾರಿಗಳ ಗಮನಕ್ಕೆ ತಾರದೇ ತೀವ್ರ ಕರ್ತವ್ಯ ನಿರ್ಲಕ್ಷತನ ತೋರಿದ ಆರೋಪದ ಮೇಲೆ ಮೂವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಪ್ರಕರಣದ ಬಗ್ಗೆ ಪೂರ್ಣ ಮಾಹಿತಿಯಿಲ್ಲದೆ, ರಾಜ್ಯದ ಗೃಹ ಸಚಿವರು ಆರೋಪಿಗಳ ಹೇಳಿಕೆಯನ್ನು ಅವಲಂಬಿಸಿ “ಪಾಕಿಸ್ತಾನ್ ಝಿಂದಾಬಾದ್” ಕೂಗಿರುವುದಕ್ಕೆ ಗುಂಪು ಹತ್ಯೆ ನಡೆದಿದೆ ಎನ್ನುವ ಮೂಲಕ ವಿವಾದ ಸೃಷ್ಟಿಸಿದ್ದರು. ಬಳಿಕ ತಮ್ಮ ಹೇಳಿಕೆಯು, ಹತ್ಯೆ ಗೈದ ಆರೋಪಿಗಳು ನೀಡಿದ ಹೇಳಿಕೆಯೇ ಹೊರತು ನನ್ನ ವೈಯಕ್ತಿಕ ಹೇಳಿಕೆಯಲ್ಲ ಎಂದು ಸಮರ್ಥಿಸಿಕೊಂಡಿದ್ದರು.

ರಾಜ್ಯದ ಗೃಹ ಸಚಿವರಾಗಿ ಪೋಲೀಸ್ ಮೇಲಾಧಿಕಾರಿಗಳಿಂದ ಯಾವುದೇ ಮಾಹಿತಿ ಲಭಿಸದೆ, ಬಂಧಿಸಲ್ಪಟ್ಟ ಆರೋಪಿಗಳು ನೀಡಿರುವ ಕಪೋಲಕಲ್ಪಿತ ಆರೋಪವನ್ನು ಎತ್ತಿ ಹಿಡಿದು ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದೆಂದರೆ, ನಿಜಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ.