janadhvani

Kannada Online News Paper

ಜಿಲ್ಲೆಯ ಮುಸ್ಲಿಮರ ಕಡೆಗಣನೆ: ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಮುಖಂಡರು ಸಾಮೂಹಿಕ ರಾಜೀನಾಮೆ

ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು ಮತ್ತು ಅದನ್ನು ತಡೆಯಲು ರಾಜ್ಯದ ಕಾಂಗ್ರೆಸ್ ಸರ್ಕಾರ ವಿಫಲಗೊಂಡಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಭುಗಿಲೆದ್ದಿರುವ ಕೋಮುವಾದಿ ಶಕ್ತಿಗಳ ಪ್ರಚೋದನಕಾರಿ ವರ್ತನೆಯನ್ನು ಹತೋಟಿಗೆ ತರುವಲ್ಲಿ ರಾಜ್ಯ ಗೃಹ ಇಲಾಖೆಯ ವೈಫಲ್ಯ ಮತ್ತು ಜಿಲ್ಲೆಯ ಮುಸ್ಲಿಮರ ಕಡೆಗಣನೆಗೆ ಬೇಸತ್ತು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಸಾಮೂಹಿಕವಾಗಿ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು ಮತ್ತು ಅದನ್ನು ತಡೆಯಲು ರಾಜ್ಯದ ಕಾಂಗ್ರೆಸ್ ಸರ್ಕಾರ ವಿಫಲಗೊಂಡಿದೆ. ದುಷ್ಕರ್ಮಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ಹತ್ಯೆಗಳಿಗೆ ಪ್ರಚೋದನೆ ನೀಡಿದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಒಟ್ಟಿನಲ್ಲಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದಿಂದ ಹಿಡಿದು ರಾಜ್ಯ ಘಟಕದವರೆಗಿನ ವಿವಿಧ ಹುದ್ದೆಗಳಲ್ಲಿರುವ ಮುಸ್ಲಿಂ ಮುಖಂಡರು ಹಾಗೂ ಕಾರ್ಯಕರ್ತರು ಇಂದು ಮಂಗಳೂರಿನ ಬೋಳಾರದಲ್ಲಿರುವ ಶಾದಿ ಮಹಲ್‌ ಸಭಾಂಗಣದಲ್ಲಿ ನಡೆದ ತುರ್ತು ಸಭೆಯಲ್ಲಿ ಸಾಮೂಹಿಕ ರಾಜೀನಾಮೆ ಪ್ರಕಟಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮುಸ್ಲಿಂ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಮಾತನಾಡಿ ಸಮುದಾಯಕ್ಕೆ ಆಗಿರುವ ಅನ್ಯಾಯ, ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಳವಣಿಗಯ ಬಗ್ಗೆ ಮಾತನಾಡುತ್ತಿದ್ದಂತೆ ಕಾರ್ಯಕರ್ತರು ವೇದಿಕೆಗೆ ನುಗ್ಗಿ ”ಬೇಕೆ ಬೇಕು ನಮಗೆ ನ್ಯಾಯಬೇಕು” ಎಂದು ಆಗ್ರಹಿಸಿದರು.

ಎಂ ಎಸ್ ಮುಹಮ್ಮದ್, ಮಾಜಿ ಕಾರ್ಪೊರೇಟರ್ ಅಬ್ದುಲ್ ರವೂಫ್, ಸುಹೈಲ್ ಕಂದಕ್ ಜನಸಮೂಹವನ್ನು ಸಮಾಧಾನ ಪಡಿಸಲು ಯತ್ನಿದರು. ಆದರೆ ಕಾರ್ಯಕರ್ತರು ಪಟ್ಟು ಬಿಡಲಿಲ್ಲ. ಕೊನೆಗೆ ನಾಯಕರು ನಮ್ಮ ನಿರ್ಧಾರಕ್ಕೆ ಬದ್ಧ ಎಂದು ಹೇಳಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂಎಸ್ ಮುಹಮ್ಮದ್, ಅಲ್ಪಸಂಖ್ಯಾತ ಅಧ್ಯಕ್ಷ ಸ್ಥಾನಕ್ಕೆ ಶಾಹುಲ್ ಹಮೀದ್ ಸಾಮೂಹಿಕ‌ ರಾಜೀನಾಮೆ ನೀಡಿರುವುದಾಗಿ ಪ್ರಕಟಿಸಿದರು.