janadhvani

Kannada Online News Paper

ಮೈತ್ರಿ ಸರಕಾರ ಭದ್ರ: ಯಾರೂ ರಾಜೀನಾಮೆ ನೀಡುವುದಿಲ್ಲ-ಎಚ್.ಡಿ.ದೇವೇಗೌಡ

ಬೆಂಗಳೂರು: ಕಾಂಗ್ರೆಸ್​ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಅವರು ಯಾರೂ ಸಹ ರಾಜೀನಾಮೆ ನೀಡುವುದಿಲ್ಲ. ಹೀಗಾಗಿ ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಸುಭದ್ರವಾಗಿ ಕಾರ್ಯನಿರ್ವಹಿಸಲಿದೆ ಎಂದು ಜೆಡಿಎಸ್​ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಗೆ ಎಲ್ಲಾ ತಯಾರಿಯನ್ನು ಮಾಡಿಕೊಳ್ಳಲಾಗುತ್ತಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಮೈತ್ರಿಯಾಗಿದ್ದೇವೆ. ಚುನಾವಣೆ ಸಿದ್ದತೆಗೆ ಸಿಎಂ ಕುಮಾರಸ್ವಾಮಿ ಎಲ್ಲಾ ಕಡೆ ಓಡಾಡುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ ಪಂಚಾಯತ್ ಚುನಾವಣೆ ಇದೆ. ಆ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು.

ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು, ಕಾಂಗ್ರೆಸ್ ಮುಂಖಡರು ಮಾಡಿಕೊಳ್ಳುತ್ತಾರೆ. ಜೆಡಿಎಸ್ ಚಿಕ್ಕ ಪಕ್ಷ. ಸಚಿವ ಸಂಪುಟ ವಿಸ್ತರಣೆ ಮಾಡುತ್ತೇವೆ. ಆದರೆ ಸದ್ಯಕ್ಕಿಲ್ಲ. ನಮ್ಮ ಪ್ರಾದೇಶಿಕ ಪಕ್ಷ 1998 ರಲ್ಲಿ ಹಲವು ಕಾರ್ಯಕ್ರಮ ನೀಡಿದೆ. ಆಗ 16 ಲೋಕಸಭಾ ಸ್ಥಾನ ಗೆದ್ದಿದ್ದೆವು. ಆದರೆ ದುರ್ವೈವ ಈಗ 2 ಸ್ಥಾನ ಮಾತ್ರ ಇದೆ ಎಂದು ಬೇಸರ ವ್ಯಕ್ತಪಡಿಸಿದರು.
ನಾವು ಮುಸ್ಲಿಂ ವಿರೋಧಿ ಅಲ್ಲ
ನಾವು ಮುಸ್ಲಿಂ ವಿರೋಧಿ ಅಲ್ಲ. ಈ ರಾಷ್ಟ್ರದಲ್ಲಿ ಮಹಿಳೆಯರಿಗೆ ಮೀಸಲಾತಿ ತಂದಿದ್ದು ಜನತಾದಳ. ರಾಜಕೀಯ ಮೀಸಲಾತಿ, ಹೆಣ್ಣು ಮಕ್ಕಳಿಗೆ ಮೀಸಲಾತಿ, ಮುಸ್ಲಿಂ ಬಾಂಧವರೆಲ್ಲರನ್ನು ಗಮನದಲ್ಲಿಟ್ಟುಕೊಂಡು ಆಡಳಿತ ನಡೆಸಿಕೊಂಡು ಹೋಗುತ್ತಿದ್ದೇವೆ. ಆದರೆ ಕೆಲವರು ನಮ್ಮದು ಜಾತಿ ಪಕ್ಷ ಅಂತ ಹೇಳುತ್ತಿದ್ದಾರೆ ಎಂದು ಆರೋಪಿಸಿದರು.