ಬೆಂಗಳೂರು, ಮಾ.19:- ರಾಜ್ಯದ ಲೋಕಸಭಾ ಚುನಾವಣೆಗೆ ಇಂದು ಅಧಿಸೂಚನೆ ಹೊರ ಬಿದ್ದಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ಏಪ್ರಿಲ್ 18 ರಂದು ಚುನಾವಣೆ ನಡೆಯಲಿದ್ದು, ಈ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದ ಚುನಾವಣಾಧಿಕಾರಿಗಳು ಇಂದು ಅಧಿಸೂಚನೆ ಹೊರಡಿಸಿದ್ದಾರೆ.
ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಅಧಿಸೂಚನೆ ಹೊರ ಬೀಳುವ ಮೂಲಕ ಈ ಎಲ್ಲ ಕ್ಷೇತ್ರಗಳಲ್ಲೂ ಇಂದಿನಿಂದಲೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.
ರಾಜ್ಯದ ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಈ 14 ಲೋಕಸಭಾ ಕ್ಷೇತ್ರಗಳಿಗೆ ಏ. 18 ರಂದು ನಡೆಯುವ ಚುನಾವಣೆಗೆ ಅಧಿಸೂಚನೆಯನ್ನು ಇಂದು ಆಯಾ ಜಿಲ್ಲಾಧಿಕಾರಿಗಳು ಹೊರಡಿಸಿದ್ದಾರೆ.
ಚುನಾವಣಾ ಅಧಿಸೂಚನೆ ಹೊರ ಬಿದ್ದಿರುವ ಇಂದಿನಿಂದಲೆ ಈ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಈ ತಿಂಗಳ 26ರವರೆಗೂ ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರಗಳ ಪರಿಶೀಲನೆ ಮಾ. 27 ರಂದು ನಡೆಯಲಿದ್ದು, ಮಾ. 29 ನಾಮಪತ್ರ ವಾಪಸ್ಸಾತಿಗೆ ಕಡೆಯ ದಿನವಾಗಿದೆ. ಮತದಾನ ಏ. 18 ರಂದು ನಡೆಯಲಿದ್ದು, ಮತ ಎಣಿಕೆ ಮೇ 23 ರಂದು ನಡೆಯಲಿದೆ.
ಮಾ. 28 ರಂದು ಅಧಿಸೂಚನೆ
ರಾಜ್ಯದ ಉಳಿದ 14 ಲೋಕಸಭಾ ಕ್ಷೇತ್ರಗಳಾದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, .ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಈ ಕ್ಷೇತ್ರಗಳಲ್ಲಿ ಏ. 23 ರಂದು ಚುನಾವಣೆ ನಡೆಯಲಿದ್ದು, ಇದಕ್ಕೆ ಸಂಬಂಧಿಸಿದಂತೆ ಮಾ. 28 ರಂದು ಅಧಿಸೂಚನೆ ಹೊರ ಬೀಳಲಿದೆ.