janadhvani

Kannada Online News Paper

ಕೋರ್ಟ್ ಆದೇಶ ಉಲ್ಲಂಘನೆ: ಕೇಂದ್ರ ಸರ್ಕಾರ ಮತ್ತು ಚು,ಆಯೋಗಕ್ಕೆ ಸುಪ್ರೀಂ ನೋಟೀಸ್

ನವದೆಹಲಿ, ಮಾ.29-ತಮ್ಮ ಇಂದಿನ ಕ್ರಿಮಿನಲ್ ಪ್ರಕರಣಗಳನ್ನು ಚುನಾವಣಾ ಸ್ಪರ್ಧೆಗೂ ಮುನ್ನ ಆಯೋಗದ ಮುಂದೆ ಘೋಷಿಸುವಂತೆ ಸುಪ್ರೀಂಕೋರ್ಟ್ ಸ್ಪಷ್ಟ ಆದೇಶ ನೀಡಿದ್ದರೂ ಕೂಡ ಅದನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿ ಮೇರೆಗೆ ಸರ್ವೋಚ್ಚ ನ್ಯಾಯಾಲಯ ಇಂದು ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟೀಸ್ ಜಾರಿಗೊಳಿಸಿದೆ.

ನ್ಯಾಯಮೂರ್ತಿಗಳಾದ ಆರ್.ಎಫ್.ನಾರಿಮನ್ ಮತ್ತು ವಿನೀತ್ ಸರನ್ ಅವರನ್ನೊಳಗೊಂಡ ಪೀಠವು ಈ ಸಂಬಂಧ ಮೂವರು ಉಪಚುನಾವಣಾ ಆಯುಕ್ತರು, ಕಾನೂನು ಕಾರ್ಯದರ್ಶಿ ಹಾಗೂ ಸಂಪುಟ ಕಾರ್ಯದರ್ಶಿಯವರಿಗೆ ನೋಟಿಸ್ ಜಾರಿಗೊಳಿಸಿ ಪ್ರತ್ಯುತ್ತರ ಕೋರಿದೆ.

ಸುಪ್ರೀಂಕೋರ್ಟ್ ಕಳೆದ ವರ್ಷ ಸೆಪ್ಟೆಂಬರ್ 25ರಂದು ಆದೇಶವೊಂದನ್ನು ಹೊರಡಿಸಿ ಚುನಾವಣೆಯಲ್ಲಿ ಸ್ಪರ್ಧಿಸುವ ಎಲ್ಲಾ ಅಭ್ಯರ್ಥಿಗಳು ತಮ್ಮ ಪೂರ್ವಾಪರ ಅಪರಾಧ ಪ್ರಕರಣಗಳ ಬಗ್ಗೆ ಚುನಾವಣಾ ಆಯೋಗಕ್ಕೆ ವಿವರ ಸಲ್ಲಿಸಬೇಕೆಂದು ಆದೇಶಿಸಿತ್ತು.

ಆದರೆ ಬಹುತೇಕ ಅಭ್ಯರ್ಥಿಗಳು ಈ ನಿರ್ದೇಶನವನ್ನು ಪಾಲಿಸಿಲ್ಲ. ಇದು ನ್ಯಾಯಾಂಗ ಆದೇಶ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ತಪ್ಪಿತಸ್ಥರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕೆಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು.

ಈ ಸಂಬಂಧ ಇದೇ ವಕೀಲ ಅಶ್ವಿನ್‍ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ ಈ ಸಂಬಂಧ ಕೇಂದ್ರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದೆ.