janadhvani

Kannada Online News Paper

ಸುರತ್ಕಲ್ ಟೋಲ್ ಗೇಟ್‌ನಲ್ಲಿ ಸ್ಥಳೀಯ ವಾಹನಗಳಿಂದ ಟೋಲ್ ಸಂಗ್ರಹಿಸುವುದಕ್ಕೆತಡೆ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ಸುರತ್ಕಲ್ ಟೋಲ್ ಗೇಟ್‌ನಲ್ಲಿ ಸ್ಥಳೀಯ ವಾಹನಗಳಿಂದಲೂ (ಕೆಎ- 19) ಟೋಲ್ ಸಂಗ್ರಹಿಸುವುದನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಗುತ್ತಿಗೆದಾರರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಮೂರು ದಿನಗಳ ಕಾಲ ತಡೆ ನೀಡಲಾಗಿದೆ.

ಮಂಗಳವಾರ ಬೆಳಿಗ್ಗೆಯಿಂದಲೇ ಸ್ಥಳೀಯ ವಾಹನಗಳಿಂದ ಟೋಲ್ ಸಂಗ್ರಹಕ್ಕೆ ಗುತ್ತಿಗೆದಾರರು ನಿರ್ಧರಿಸಿದ್ದರು. ಸ್ಥಳೀಯರ ವಿರೋಧ ಇದ್ದುದರಿಂದ ಪೊಲೀಸ್ ಭದ್ರತೆಯಲ್ಲಿ ಟೋಲ್ ಸಂಗ್ರಹಕ್ಕೆ ಸಿದ್ಧತೆ ಮಾಡಿಕೊಂಡಿದ್ದರು.

ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಸ್ಥಳೀಯ ವಾಹನಗಳಿಂದ ಟೋಲ್ ಸಂಗ್ರಹ ಮಾಡದಂತೆ ಆಗ್ರಹಿಸಿತ್ತು. ಈ ಹಿಂದಿನ ತೀರ್ಮಾನದಂತೆ ಟೋಲ್ ಗೇಟ್ ತೆರವು ಮಾಡುವಂತೆ ಪಟ್ಟು ಹಿಡಿದಿದೆ. ಸೋಮವಾರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗ ಪತ್ರ ಬರೆದಿದ್ದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಸ್ಥಳೀಯ ವಾಹನಗಳಿಂದ ಟೋಲ್‌ ಸಂಗ್ರಹಿಸದಂತೆ ಗುತ್ತಿಗೆದಾರರಿಗೆ ಸೂಚಿಸಲು ಕೋರಿದ್ದರು. ಮುಖ್ಯ ಕಾರ್ಯದರ್ಶಿಯವರ ಸೂಚನೆಯಂತೆ ತಡೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರತಿಭಟನಾ ಸಭೆ: ಸ್ಥಳೀಯ ವಾಹನಗಳಿಂದ ಟೋಲ್ ಸಂಗ್ರಹ ವಿರೋಧಿಸಿ ಮತ್ತು ಸುರತ್ಕಲ್ ಟೋಲ್ ಗೇಟ್ ತೆರವು ಮಾಡುವಂತೆ ಆಗ್ರಹಿಸಿ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ ಟೋಲ್ ಗೇಟ್ ಎದುರಿನಲ್ಲೇ ಪ್ರತಿಭಟನೆ ‌ನಡೆಯಿತು.