ನವದೆಹಲಿ(ಆಗಸ್ಟ್.18): ಉತ್ತರಾಖಂಡದಲ್ಲಿ ವರುಣನ ಆರ್ಭಟ ಭಾರೀ ಜೋರಾಗಿದೆ. ಇಲ್ಲಿನ ಉತ್ತರಕಾಶಿ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದ ಕಾರಣದಿಂದಾಗಿ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದ ಅನೇಕ ಮನೆಗಳು ಕುಸಿದಿವೆ. ಸದ್ಯವೀಗ ಇಲ್ಲಿನ ಜನರು ಹಾನಿಗೀಡಾದ ಮನೆಗಳ ಅವಶೇಷಗಳಡಿ ಸಿಲುಕಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ರಕ್ಷಣಾ ಕಾರ್ಯಾಚರಣೆಗಾಗಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಇಂಡೊ-ಟಿಬೆಟನ್ ಬಾರ್ಡರ್ ಪೊಲೀಸ್(ಐಟಿಬಿಪಿ), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್ಡಿಆರ್ಎಫ್) ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಇಲ್ಲಿ ಅವಶೇಷಗಳಡಿ ಸಿಲುಕಿಕೊಂಡ ಜನರ ರಕ್ಷಣೆ ಕಾರ್ಯಾಚರಣೆ ಮುಂದುವರೆದಿದೆ ಎಂದು ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಶಿಶ್ ಚೌಹಾಣ್ ತಿಳಿಸಿದ್ದಾರೆ.
ಉತ್ತರಕಾಶಿ ಜಿಲ್ಲೆಯಲ್ಲಿ ಭಾರೀ ಪ್ರವಾಹ ಸಂಭವಿಸಿದೆ. ಇದರ ಪರಿಣಾಮ 10ಕ್ಕೂ ಹೆಚ್ಚು ಮನೆಗಳು ಹಾನಿಗೀಡಾಗಿವೆ. ತೀವ್ರ ಮಳೆಗೆ ಇಲ್ಲಿನ ಟೌನ್ಸ್ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆದ್ದರಿಂದಲೇ ಈ ಪ್ರದೇಶದಲ್ಲಿ ಪೊಲೀಸರು ರೆಡ್ ಅಲರ್ಟ್ ಘೋಷಿಸಿದ್ದಾರೆ.
ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಯಾವುದೇ ಅನಾಹುತ ಸಂಭವಿಸಿದಂತೆ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಮೂಲಗಳ ಪ್ರಕಾರ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಭೂಕುಸಿತ ಸಂಭವಿಸಿದೆ.
ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಉತ್ತರಾಖಂಡ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿತ್ತು.
ಇಲ್ಲಿನ ಡೆಹ್ರಾಡೂನ್, ಉತ್ತರಕಾಶಿ, ಉದಾಮ್ ಸಿಂಗ್ ನಗರ ಸೇರಿದಂತೆ ಹಲವೆಡೆ ಕಳೆದ 24 ಗಂಟೆಗಳಿಂದಲೂ ಕೂಡ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಮುಂದಿನ ಮೂದು ಭಾರೀ ಮಳೆ ಸುರಿಯಲಿದೆ ಎಂದು ಎಚ್ಚರಿಸಿತ್ತು. ಈ ನಿಟ್ಟಿನಲ್ಲಿ ಜನರು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿತ್ತು.