ಬೆಂಗಳೂರು.ಆ,19:ರಾಜ್ಯ ಸರ್ಕಾರದ ಬಹುನಿರೀಕ್ಷಿತ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಮಂಗಳವಾರ ಬೆಳಿಗ್ಗೆ 10 30ಕ್ಕೆ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಸರ್ಕಾರ ರಚನೆಯಾಗಿ ಒಂದು ತಿಂಗಳಾಗುತ್ತಾ ಬಂದಿದ್ದರೂ ಇದುವರೆಗೂ ಸಂಪುಟ ವಿಸ್ತರಣೆ ಸಾಧ್ಯವಾಗಿರಲಿಲ್ಲ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮೊದಲ ಹಂತದ ಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ತೋರಿದ ಹಿನ್ನೆಲೆಯಲ್ಲಿ ಮಂಗಳವಾರ ಮಂತ್ರಿಮಂಡಲ ವಿಸ್ತರಣೆಯಾಗಲಿದೆ.
ಮೊದಲ ಹಂತದಲ್ಲಿ 13 ಶಾಸಕರಿಗೆ ಸಚಿವರಾಗುವ ಭಾಗ್ಯ ದೊರೆಯಲಿದೆ. ಈ ಸಂಬಂಧ ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸಚಿವಾಕಾಂಕ್ಷಿಗಳ ಜೊತೆ ಸಭೆ ನಡೆಸಿ ನಾಳೆ ಸಂಪಟ ವಿಸ್ತರಣೆಗೆ ಸಮಯ ಗೊತ್ತುಪಡಿಸಲಾಗಿದ್ದು, ಈ ಸಂಬಂಧ ರಾಜಭವನಕ್ಕೆ ಮಾಹಿತಿ ರವಾನಿಸಲಾಗಿದೆ ಎಂದು ತಿಳಿಸಿದರು.
ಮಂತ್ರಿಮಂಡಲ ವಿಸ್ತರಣೆಗೂ ಮುನ್ನ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದೆ.