janadhvani

Kannada Online News Paper

ಪೌರತ್ವ ವಿಭಜನೆ: ಭಾರತ ಹೊತ್ತಿ ಉರಿಯುತ್ತಿದೆ- ಯುಪಿ ಯಲ್ಲಿ 15 ಕ್ಕೂ ಹೆಚ್ಚು ಮಂದಿ ಬಲಿ

ಲಖನೌ: ಪೌರತ್ವ ಕಾಯ್ದೆ ವಿರೋಧಿಸಿ ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರತಿಭಟನೆ ವೇಳೆ 8 ವರ್ಷದ ಬಾಲಕ ಸೇರಿದಂತೆ ಒಟ್ಟು 15 ಮಂದಿ ಬಲಿಯಾಗಿರುವುದಾಗಿ ವರದಿಗಳು ತಿಳಿಸಿವೆ.

ಪ್ರತಿಭಟನಾಕಾರರನ್ನು ಪೊಲೀಸರು ಹಿಮ್ಮೆಟ್ಟಿಸುತ್ತಿರುವ ವೇಳೆ ವಾರಣಾಸಿಯಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ 8ರ ಬಾಲಕನೊಬ್ಬ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ. ಇನ್ನು ಮೀರುತ್ ಜಿಲ್ಲೆಯಲ್ಲಿ ನಾಲ್ಕು ಮಂದಿ ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ.

ಶುಕ್ರವಾರ ಪ್ರಾರ್ಥನೆ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿದ್ದು, ಈ ವೇಳೆ ಹಲವು ಮಂದಿ ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದೆ.

ಘರ್ಷಣೆ ವೇಳೆ 6 ಮಂದಿ ಪೊಲೀಸರಿಗೂ ಗುಂಡಿನ ಗಾಯಗಳಾಗಿದ್ದು, ಈ ಪೈಕಿ ಓರ್ವ ಪೊಲೀಸ್ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಬಿಜ್ನೋರ್, ಸಂಭಾಲ್, ಫಿರೋಜಾಬಾದ್, ಕಾನ್ಪುರ, ವಾರಣಾಸಿ ಹಾಗೂ ಮೀರುತ್ ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎಂದು ವರದಿಗಳು ತಿಳಿಸಿವೆ.