janadhvani

Kannada Online News Paper

ಮಂಗಳೂರಿನ ಗೋಲಿಬಾರ್​ ಪ್ರಕರಣ ಸಿಐಡಿ ತನಿಖೆಗೆ- ಮುಖ್ಯಮಂತ್ರಿ

ಬೆಂಗಳೂರು ,ಡಿ.23: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆಸಿದ ಪ್ರತಿಭಟನೆ ವೇಳೆ ನಡೆಸಿದ ಗೋಲಿಬಾರ್​ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗುವುದು ಎಂದು ಸಿಎಂ ಬಿಎಸ್​ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ನಿಷೇಧಾಜ್ಞೆ ನಡುವೆ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ತಾರಕ್ಕೇಕೆರಿದ್ದು, ಈ ವೇಳೆ ಪೊಲೀಸರು ಗೋಲಿಬಾರ್ ನಡೆಸಿದ್ದರು. ಈ ವೇಳೆ ಪೊಲೀಸರ ಗುಂಡಿಗೆ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದರು. ಈ ಘಟನೆಯಿಂದಾಗಿ ಜಿಲ್ಲೆಯಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಘಟನೆಗೆ ಎಲ್ಲೆಡೆ ಖಂಡನೆ ವ್ಯಕ್ತವಾಗಿತ್ತು.

ಇದಾದ ಬಳಿಕ ಮಂಗಳೂರಿಗೆ ಭೇಟಿ ನೀಡಿದ ಸಿಎಂ ಬಿಎಸ್​ ಯಡಿಯೂರಪ್ಪ, ಜಿಲ್ಲೆಯ ವಾಸ್ತವ ಸ್ಥಿತಿ ಹಾಗೂ ಗೋಲಿಬಾರ್​ ಪ್ರಕರಣದ ಕುರಿತು ಅಲ್ಲಿನ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದರು. ಅಲ್ಲದೇ ಮೃತ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದರು.

ಘಟನೆ ಕುರಿತು ತನಿಖೆಗೆ ಆಗ್ರಹಿಸಲಾಗುವುದು ಎಂದಿದ್ದ ಸಿಎಂ ಬಿಎಸ್​ವೈ ಈ ಪ್ರಕರಣವನ್ನು ಸಿಐಡಿ ಪೊಲೀಸರಿಗೆ ನೀಡಿದ್ದಾರೆ. ಇನ್ನು ಇದನ್ನು ನ್ಯಾಯಾಂಗ ವ್ಯವಸ್ಥೆಗೂ ವಹಿಸಲಾಗಿತ್ತು. ಈ ಕುರಿತು ಮ್ಯಾಜಿಸ್ಟೇಟರ್​ ಕೂಡ ತನಿಖೆ ಮುಂದುವರೆಸಲಿದ್ದಾರೆ. ಠಾಣೆ ಮೇಲೆ ದಾಳಿ ಮಾಡಿದವರಿಗೆ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಅವರು ತಿಳಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾವುದೇ ಅಲ್ಪ ಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ತೊಂದರೆಯಿಲ್ಲ. ಇದನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಸ್ಪಷ್ಟಪಡಿಸಿದ್ದಾರೆ. ಆದರೂ ಕೂಡ ಕಾಂಗ್ರೆಸ್​ ಲಾಭಕ್ಕಾಗಿ ಈ ಪ್ರತಿಭಟನೆಗೆ ಮುಂದಾಗಿದೆ. ಈ ಘಟನೆಗೆಲ್ಲಾ ಕಾಂಗ್ರೆಸ್​ ಕಾರಣ ಎಂದು ಇದೇ ವೇಳೆ ಆರೋಪಿಸಿದರು. ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಡಿ.22ರಂದು ದೆಹಲಿಗೆ ಹೋಗಬೇಕಿದ್ದ ಸಿಎಂ. ಮಂಗಳೂರು ಘಟನೆ ಹಿನ್ನೆಲೆ ತಮ್ಮ ಪ್ರವಾಸ ಮುಂದೂಡಿರುವುದಾಗಿ ತಿಳಿಸಿದ್ದಾರೆ.