janadhvani

Kannada Online News Paper

ವಿವಾದಾತ್ಮಕ ಹೇಳಿಕೆ: ಅನಂತ್ ಕುಮಾರ್ ಹೆಗಡೆ ವಿರುದ್ಧ ಬಿಜೆಪಿ ಗರಂ- ಸಂಸದೀಯ ಸಭೆಗೆ ನಿಷೇಧ

ಬೆಂಗಳೂರು: ವಿವಾದಾತ್ಮಕ ಹೇಳಿಕೆಗಳ ಸರದಾರ,ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಬಿಜೆಪಿ ಹೈಕಮಾಂಡ್ ಗರಂ ಆಗಿದೆ.

ಸ್ವಾತಂತ್ರ್ಯ ಹೋರಾಟ ಹಾಗೂರಾಷ್ಟ್ರಪಿತ ಮಹಾತ್ಮ ಗಾಂಧಿ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿರುವ ಅನಂತಕುಮಾರ್‌ ಹೆಗಡೆಗೆ ಹೈಕಮಾಂಡ್‌ ಶೋಕಾಸ್‌ ನೋಟಿಸ್‌ ನೀಡಿದೆ. ಅಲ್ಲದೇ ಮಂಗಳವಾರ ನಡೆಯಲಿರುವ ಸಂಸದೀಯ ಮಂಡಳಿ ಸಭೆಗೆ ನಿಷೇಧಿಸಲಾಗಿದೆ. ಆಕ್ಷೇಪಾರ್ಹ ಹೇಳಿಕೆ ಕುರಿತು ಪ್ರತಿಪಕ್ಷಗಳಿಂದ ಭಾರಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಬಿಜೆಪಿ ಶಿಸ್ತು ಕ್ರಮಕ್ಕೆ ಮುಂದಾಗಿದೆ.

ಮೋದಿ ಸರಕಾರ ಮಹಾತ್ಮ ಗಾಂಧಿ ಅವರ 150ನೇ ಜಯಂತ್ಯುತ್ಸವ ಆಚರಿಸುತ್ತಿರುವ ಸಂದರ್ಭದಲ್ಲೇ ಗಾಂಧೀಜಿ ಕುರಿತ ಈ ಆಕ್ಷೇಪಾರ್ಹ ಹೇಳಿಕೆಯು ಬಿಜೆಪಿಯ ಮುಜುಗರವನ್ನು ಇನ್ನಷ್ಟು ಹೆಚ್ಚಿಸಿದೆ. ಅನಂತಕುಮಾರ್‌ ಹೆಗಡೆಗೆ ಶೋಕಾಸ್‌ ನೋಟಿಸ್‌ ಜಾರಿಯಾಗಿರುವ ಬಗ್ಗೆ ಬಿಜೆಪಿ ರಾಜ್ಯ ಘಟಕದ ಹಿರಿಯ ನಾಯಕರು ಸ್ಪಷ್ಟಪಡಿಸಿದ್ದಾರೆ.
ಅನಂತ್ ಕುಮಾರ್ ಹೆಗಡೆ ಬೆಂಗಳೂರಿನಲ್ಲಿ ನಡೆದಿದ್ದ ಮತ್ತೆ ಮತ್ತೆ ಸಾವರ್ಕರ್ ಕಾರ್ಯಕ್ರಮದಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟ, ಅಹಿಂಸಾ ಚಳವಳಿ ಹಾಗೂ ಮಹಾತ್ಮ ಗಾಂಧಿಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಇತಿಹಾಸದ ಪ್ರಕಾರ ಉಪವಾಸಕ್ಕೆ ಹೆದರಿ ಬ್ರಿಟಿಷರು ದೇಶ ಬಿಟ್ಟು ಹೋದರು, ಇದನ್ನು ಕೇಳಿದರೆ ತಣ್ಣಗಿರುವ ರಕ್ತ ಹೆಪ್ಪುಗಟ್ಟಿ ಹೋಗುತ್ತದೆ. ಸ್ವಾತಂತ್ರ್ಯ ಹೋರಾಟದಲ್ಲಿ ಲಾಠಿ ನೋಡದ, ಏಟು ತಿನ್ನದವರನ್ನು ಹಾಗೂ ಬ್ರಿಟಿಷರ ಜೊತೆಗೆ ಒಳಒಪ್ಪಂದ ಮಾಡಿಕೊಂಡವರನ್ನು ಇತಿಹಾಸದ ಪುಟದಲ್ಲಿ ಸ್ವಾತಂತ್ರ್ಯ ಹೋರಾಟಗಾರರೆಂದು ಬಿಂಬಿಸಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದರು.
ಈ ನಡುವೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಕಾಂಗ್ರೆಸ್ ದೂರು ನೀಡಿದೆ. ರಾಷ್ಟ್ರೀಯ ಕಾಂಗ್ರೆಸ್ ವಕ್ತಾರ ಬ್ರಿಜೇಶ್ ಕಾಳಪ್ಪ ದೂರು ನೀಡಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಸಂಸದ ಹೆಗಡೆ ಹೇಳಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.