ಮಡಿಕೇರಿ: ಕಳೆದ ಎರಡು ವರ್ಷಗಳಿಂದ ಅತಿವೃಷ್ಟಿ ಹಾನಿಯಿಂದ ಅನೇಕ ಕಷ್ಟ ನಷ್ಟಗಳನ್ನು ಅನುಭವಿಸಿರುವ ಕೊಡಗು ಜಿಲ್ಲೆಯ ಜನ ಇದೀಗ ಕೊರೋನಾ ಲಾಕ್ಡೌನ್ ಸಂಕಷ್ಟಕ್ಕೆ ಸಿಲುಕಿರುವುದರಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರ ಕೊಡಗನ್ನು ವಿಶೇಷವಾಗಿ ಪರಿಗಣಿಸಿ ವಿಶೇಷ ಪ್ಯಾಕೇಜಿನ ಮೂಲಕ ಹೆಚ್ಚಿನ ಆರ್ಥಿಕ ನೆರವನ್ನು ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ವೀಣಾ ಅಚ್ಚಯ್ಯ ಹೇಳಿದರು.
ನಗರದಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 2018 ಮತ್ತು 2019ರಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ಕೊಡಗಿನ ಜನ ಸಾಮಾನ್ಯರು, ರೈತರು ಹಾಗೂ ಬೆಳೆಗಾರರು ಅನೇಕ ರೀತಿಯಲ್ಲಿ ಕಷ್ಟಕ್ಕೆ ಸಿಲುಕಿಕೊಂಡು ಇಲ್ಲಿಯವರೆಗೆ ಚೇತರಿಸಿಕೊಂಡಿಲ್ಲ. ಇದರ ನಡುವೆಯೇ ಕೊರೋನಾ ಲಾಕ್ಡೌನ್ ಜಾರಿಯಾಗಿ ಜಿಲ್ಲೆಯ ಆರ್ಥಿಕ ಪರಿಸ್ಥಿತಿಯೇ ಸಂಪೂರ್ಣವಾಗಿ ಬುಡ ಮೇಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಮತ್ತೊಂದು ಮಳೆಗಾಲ ಜಿಲ್ಲೆಯನ್ನು ಪ್ರವೇಶಿಸಲಿದ್ದು, ರೈತರು, ಬೆಳೆಗಾರರು ಸೇರಿದಂತೆ ಎಲ್ಲಾ ವರ್ಗದ ಜನ ಆತಂಕದಲ್ಲಿದ್ದಾರೆ. ಆದ್ದರಿಂದ ಕೊಡಗಿನ ಆರ್ಥಿಕ ಸಬಲೀಕರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಶೇಷ ಅನುದಾನ ನೀಡಬೇಕು.
ಅತಿವೃಷ್ಟಿ ಹಾನಿ ಮತ್ತು ಕೊರೋನಾ ಲಾಕ್ಡೌನ್ ಸಂಕಷ್ಟದ ನಡುವೆಯೇ ರೈತರು ಹಾಗೂ ಬೆಳೆಗಾರರಿಗೆ ಸಂಬಂಧಿಸಿದ ವಿಚಾರದಲ್ಲಿ ಹೊಸ ಹೊಸ ಕಾನೂನು, ಕಾಯ್ದೆಗಳನ್ನು ಜಾರಿಗೆ ತರಲು ಸರ್ಕಾರ ಮುಂದಾಗಿರುವುದು ಖಂಡನೀಯ. ದೇಶ ಸಂದಿಗ್ಧ ಪರಿಸ್ಥಿತಿಯಲ್ಲಿರುವಾಗಲೇ ಸಹಕಾರ ಸಂಘಗಳು ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾಯ್ದೆಗಳಿಗೆ ತಿದ್ದುಪಡಿ ತಂದಿರುವುದು ರೈತ ವಿರೋಧಿ ನೀತಿಯಾಗಿದೆ.
ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಸಾಲವನ್ನು ನೀಡಿದ್ದ ಸರ್ಕಾರ ಇದೀಗ ವಸೂಲಾತಿ ಸಂದರ್ಭ ಶೇ.7 ರಷ್ಟು ಬಡ್ಡಿ ಪಾವತಿಸಬೇಕೆಂದು ನಿಯಮ ಜಾರಿ ಮಾಡಿರುವುದನ್ನು ತೀವ್ರವಾಗಿ ವಿರೋಧಿಸುತ್ತೇವೆ. ಇದು ರೈತರು ಹಾಗೂ ಬೆಳೆಗಾರರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸುವ ಹುನ್ನಾರವಾಗಿದೆ. ಶೂನ್ಯ ಬಡ್ಡಿದರದ ಹಳೆಯ ಸಾಲಕ್ಕೆ ಶೇ. 7 ರಷ್ಟು ಬಡ್ಡಿ ವಸೂಲಿ ಮಾಡುವ ಕ್ರಮವನ್ನು ಕೈಬಿಟ್ಟು ಹೊಸ ಸಾಲಕ್ಕೆ ಹೊಸ ನಿಯಮವನ್ನು ಜಾರಿಗೊಳಿಸಲಿ ಎನ್ನುವುದು ನಮ್ಮ ಒತ್ತಾಯವಾಗಿದೆ.
ಪಡಿತರ ಚೀಟಿ ಇರುವವರಿಗೆ ಮಾತ್ರ ಸಾಲ ನೀಡಲಾಗುವುದೆಂದು ಸರ್ಕಾರ ಹೇಳಿದೆ. ಆದರೆ ಒಂದೇ ಪಡಿತರ ಚೀಟಿಯಲ್ಲಿ ಕುಟುಂಬದ ಎಲ್ಲಾ ಸದಸ್ಯರುಗಳ ಹೆಸರಿದ್ದು, ಪ್ರತ್ಯೇಕವಾಗಿ ತಮ್ಮ ತಮ್ಮ ಹೆಸರಿಗೆ ಸೇರಿದ ಭೂಮಿಯಲ್ಲಿ ಕೃಷಿ ಮಾಡುವ ಅನೇಕ ಕುಟುಂಬಗಳು ಕೊಡಗು ಜಿಲ್ಲೆಯಲ್ಲಿವೆ. ಸರ್ಕಾರ ಪಡಿತರ ಚೀಟಿ ಇರುವವರಿಗೆ ಮಾತ್ರ ಸಾಲ ನೀಡಲು ಮುಂದಾದರೆ ಉಳಿದ ರೈತರಿಗೆ ಅನ್ಯಾಯವಾಗಲಿದೆ. ಇತ್ತೀಚಿಗೆ ಜಾರಿಗೆ ಬಂದಿರುವ ಸರ್ಕಾರದ ಹೊಸ ನಿಯಮಗಳು ರೈತರನ್ನು ಸಂಪೂರ್ಣವಾಗಿ ಗೊಂದಲದಲ್ಲಿ ಸಿಲುಕಿಸಿದೆ.
ಡಿಸಿಸಿ ಬ್ಯಾಂಕ್ನಲ್ಲಿ ರುಪೇ ಕಾರ್ಡ್ ಮೂಲಕ ಸಾಲ ನೀಡಲಾಗುವುದೆಂದು ಘೋಷಿಸುವ ಮೂಲಕ ರೈತರು ಹಾಗೂ ಬೆಳೆಗಾರರನ್ನು ಇಕ್ಕಟ್ಟಿಗೆ ಸಿಲುಕಿಸಲಾಗಿದೆ. ಅಲ್ಲದೇ ಡಿಸಿಸಿ ಬ್ಯಾಂಕ್ ಹೊರತು ಪಡಿಸಿದಂತೆ ಬೇರೆ ಯಾವುದೇ ಬ್ಯಾಂಕ್ನಲ್ಲಿ ಸಾಲ ಪಡೆಯುವಂತಿಲ್ಲ ಎಂದು ಸೂಚಿಸಲಾಗಿದೆ. ಕೇವಲ 3 ಲಕ್ಷ ರೂ. ಸಾಲಕ್ಕಾಗಿ ರೈತರು ಡಿಸಿಸಿ ಬ್ಯಾಂಕ್ಗೆ 100 ದಿನ ಅಲೆಯಬೇಕೇ ಎನ್ನುವ ಪ್ರಶ್ನೆ ಉದ್ಭವಿಸಿದೆ.
ಕೊರೋನಾ ಲಾಕ್ಡೌನ್ ನ ಸಂಕಷ್ಟದ ಪರಿಸ್ಥಿತಿಯ ನಡುವೆಯೇ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯ್ದೆಗೆ ತರಾತುರಿಯಲ್ಲಿ ತಿದ್ದುಪಡಿ ತರಲಾಗಿದೆ.
ಈ ಕಾಯ್ದೆ ಜಾರಿಯಿಂದ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ ಹೊರತು ಬೇರೆ ಯಾವುದೇ ಲಾಭವಿಲ್ಲ. ಕಾಯ್ದೆ ಜಾರಿಗೆ ಮೊದಲು ಸರ್ಕಾರ ಅಧಿವೇಶನದಲ್ಲಿ ವಿಚಾರವನ್ನು ಮಂಡಿಸಿ ಚರ್ಚೆ ಮಾಡಬೇಕಾಗಿತ್ತು. ತರಾತುರಿಯಲ್ಲಿ ಕಾಯ್ದೆಯನ್ನು ಜಾರಿ ಮಾಡಿರುವುದನ್ನು ಗಮನಿಸಿದರೆ ಇದರಲ್ಲಿ ರೈತರಿಗೆ ಅನಾನುಕೂಲವೇ ಹೆಚ್ಚಾಗುವುದು ಸ್ಪಷ್ಟವಾಗುತ್ತಿದೆ. ಈ ಕಾಯ್ದೆಯ ವಿರುದ್ಧ ಮುಂದಿನ ದಿನಗಳಲ್ಲಿ ರೈತರು ಒಗ್ಗಟ್ಟಿನ ಹೋರಾಟ ನಡೆಸುವ ಅನಿವಾರ್ಯತೆ ಇದೆ.
ಕೊರೋನಾ ಸೋಂಕು ಹರಡದಂತೆ ತಡೆಯಲು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಪಕ್ಷ ಭೇದ ಮರೆತು ಅಧಿಕಾರಿಗಳ ಸಹಕಾರದೊಂದಿಗೆ ಶ್ರಮಿಸಿದ್ದೇವೆ. ಆದರೆ ಜಿಲ್ಲೆಯ ರೈತರು ಮತ್ತು ಬೆಳೆಗಾರರ ಆರ್ಥಿಕ ಪರಿಸ್ಥಿತಿ ಚೇತರಿಕೆ ಕಾಣುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ. ಆದ್ದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅತಿವೃಷ್ಟಿ ಹಾನಿಯಿಂದ ಕಷ್ಟ ಅನುಭವಿಸುತ್ತಿರುವ ಕೊಡಗು ಜಿಲ್ಲೆಯನ್ನು ವಿಶೇಷವಾಗಿ ಪರಿಗಣಿಸಲೇಬೇಕಾಗಿದೆ.
2018 ರಲ್ಲಿ ಅತಿವೃಷ್ಟಿಯಿಂದ ಮಡಿಕೇರಿ ತಾಲ್ಲೂಕಿನಲ್ಲಿ ಅನೇಕ ಕಷ್ಟ ನಷ್ಟ, ಸಾವುಗಳು ಸಂಭವಿಸಿದೆ. ಇದೇ ಪರಿಸ್ಥಿತಿ 2019ರಲ್ಲಿ ಇಡೀ ಕೊಡಗು ಜಿಲ್ಲೆಯಲ್ಲಿ ಕಂಡು ಬಂದಿದ್ದು, ಇದರ ಪರಿಣಾಮ ರೈತ ಸಮೂಹದ ಸ್ಥಿತಿ ಅಧೋಗತಿಗೆ ಇಳಿದಿದೆ. ಅತಿವೃಷ್ಟಿ ಹಾನಿ ಸಂಭವಿಸಿ ಇಷ್ಟು ದಿನಗಳೇ ಕಳೆದಿದ್ದರು ನೊಂದವರಿಗೆ ಇಲ್ಲಿಯವರೆಗೆ ತೃಪ್ತಿಯಾಗುವ ರೀತಿಯ ಪರಿಹಾರ ದೊರೆತ್ತಿಲ್ಲ. ನೂತನ ಮನೆಗಳ ನಿರ್ಮಾಣ ಕಾರ್ಯ ಇನ್ನೂ ಕೂಡ ಪೂರ್ಣಗೊಳ್ಳದೆ ಸಂತ್ರಸ್ತರಿಗೆ ಹಸ್ತಾಂತರವಾಗಿಲ್ಲ.
2019ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಮನೆಗಳನ್ನು ಕಳೆದುಕೊಂಡವರಿಗೆ ಇಲ್ಲಿಯವರೆಗೆ ಜಾಗವನ್ನೇ ಗುರುತಿಸಿಲ್ಲ, ಬಾಡಿಗೆ ಮನೆಗಳಲ್ಲಿ ಆಶ್ರಯ ಪಡೆದವರಿಗೆ ಸರ್ಕಾರ ಬಾಡಿಗೆ ಹಣವನ್ನೇ ನೀಡಿಲ್ಲ. ಮತ್ತೊಂದು ಮಳೆಗಾಲ ಆರಂಭವಾಗಲು ಕೆಲವೇ ದಿನಗಳು ಬಾಕಿ ಉಳಿದಿದ್ದು, ಕಾವೇರಿ ನದಿಪಾತ್ರದ ಸಿದ್ದಾಪುರ, ಕರಡಿಗೋಡು, ನೆಲ್ಲಿಹುದಿಕೇರಿ ಸುತ್ತಮುತ್ತಲ ಭಾಗದ ಮಳೆಹಾನಿ ಸಂತ್ರಸ್ತರು ಈ ಬಾರಿ ಎಲ್ಲಿಗೆ ಹೋಗುತ್ತಾರೆ ಎನ್ನುವ ಪ್ರಶ್ನೆ ಉದ್ಭವಿಸಿದೆ. ಪ್ರವಾಹ ಎದುರಾದಾಗ ಮತ್ತೆ ಇವರುಗಳಿಗೆ ಪರಿಹಾರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಬೇಕಾದ ಅನಿವಾರ್ಯತೆ ಇದೆ.
ಕಳೆದ ಆರು ತಿಂಗಳಿನಿಂದ ಜಿಲ್ಲೆಯ ಜನಸಮಾನ್ಯರಿಗೆ ವಿಧವಾ ವೇತನ, ವಿಕಲಚೇತನ ವೇತನ, ವೃದ್ಧಾಪ್ಯ ವೇತನ ಪಾವತಿಯಾಗಿಲ್ಲ. ಇದಕ್ಕೆ ಸರ್ಕಾರದ ವೈಫಲ್ಯ ಅಥವಾ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೇ ಎನ್ನುವ ಸಂಶಯಗಳು ಹುಟ್ಟಿಕೊಂಡಿದೆ. ಹಣ ನೀಡದೆ ಸತಾಯಿಸುತ್ತಿರುವ ಸರ್ಕಾರದ ನಿರ್ಲಕ್ಷ್ಯದಿಂದ ಬಡವರು ಕಚೇರಿಯಿಂದ ಕಚೇರಿಗೆ ಅಲೆದು ಅಲೆದು ಸಾಕಾಗಿದೆ.
ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಶಾಸಕರು, ಸಂಸದರು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಬಿಜೆಪಿಯವರೇ ಆಗಿದ್ದಾರೆ. ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದೆ. ಆದರೆ ಕೊಡಗು ಜಿಲ್ಲೆಯ ಜನರಿಗೆ, ರೈತರಿಗೆ, ಬೆಳೆಗಾರರಿಗೆ ಯಾವುದೇ ಲಾಭವಾಗಿಲ್ಲ. ಜಿಲ್ಲೆಗೆ ಆಗಮಿಸುವ ಹೊರ ಜಿಲ್ಲೆಯ ಉಸ್ತುವಾರಿ ಸಚಿವರು ಅಥವಾ ಕೃಷಿ ಸಚಿವರು ಜಿಲ್ಲೆಯಲ್ಲಿ ಪಾಳುಬಿದ್ದಿರುವ ಗದ್ದೆ, ತೋಟಗಳ ಬಗ್ಗೆ ಮಾತನಾಡುತ್ತಾರೆ.
ಆದರೆ ಇಲ್ಲಿನ ರೈತರು ಹಾಗೂ ಬೆಳೆಗಾರರು ಪ್ರಾಕೃತಿಕ ವಿಕೋಪ, ವನ್ಯಜೀವಿಗಳ ದಾಳಿ, ದುಬಾರಿ ನಿರ್ವಹಣಾ ವೆಚ್ಚದಿಂದ ಕಂಗೆಟ್ಟಿರುವ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಅತಿಯಾದ ಮಳೆಯಿಂದ ಪ್ರವಾಹ ಏರ್ಪಟ್ಟು, ಗದ್ದೆ ತೋಟಗಳು ಕೊಚ್ಚಿ ಹೋಗಿರುವುದರಲ್ಲದೆ ಮಣ್ಣು ಮತ್ತು ಮರಳು ಬಂದು ನಿಂತ್ತಿದೆ. ಈ ರೀತಿಯಾದ ನಷ್ಟಕ್ಕೆ ಸಂಬಂಧಿಸಿದಂತೆ ಯಾವುದೇ ಪರಿಹಾರವನ್ನು ಇಲ್ಲಿಯವರೆಗೆ ಘೋಷಿಸದ ಸರ್ಕಾರವೇ ಗದ್ದೆ ಮತ್ತು ತೋಟಗಳು ಪಾಳು ಬೀಳಲು ಕಾರಣವಾಗಿದೆ.
ಇತ್ತೀಚಿನ ವರ್ಷಗಳಲ್ಲಿ ನಿತ್ಯ ವನ್ಯಜೀವಿಗಳು ದಾಳಿಮಾಡುತ್ತಿವೆ. ಕಾಡಾನೆ ದಾಳಿಯಿಂದ ಗದ್ದೆ ತೋಟಗಳು ನಾಶವಾಗುತ್ತಿದ್ದರೆ, ಹುಲಿ, ಚಿರತೆಗಳ ದಾಳಿಗೆ ಹಸುಗಳು ಬಲಿಯಾಗುತ್ತಿವೆ. ಇಷ್ಟೆಲ್ಲಾ ಸಂಕಷ್ಟಗಳು ಇದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊಡಗಿನ ಬಗ್ಗೆ ಕುರುಡಾಗಿವೆ.
ಹೆಕ್ಟೆರ್ಗೆ ತಲಾ 5 ಸಾವಿರ ರೂ. ಗಳಂತೆ ಪರಿಹಾರ ನೀಡುವುದು ಅವೈಜ್ಞಾನಿಕ ಕ್ರಮವಾಗಿದ್ದು, ಇದು ಅತ್ಯಲ್ಪ ಮೊತ್ತದ ಪರಿಹಾರವಾಗಿದೆ. ಬೆಳೆದ ಬೆಲೆಗೆ ಸೂಕ್ತ ಬೆಲೆಯೂ ಸಿಗದೇ ಮುಂದಿನ ಜೀವನ ಹೇಗೆ ಎನ್ನುವ ಆತಂಕದಲ್ಲಿ ಕೊಡಗಿನ ಬೆಳೆಗಾರರೂ ಹಾಗೂ ರೈತರು ಇದ್ದಾರೆ. ಇದೇ ಪರಿಸ್ಥಿತಿ ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಎದುರಾಗಿದ್ದರೆ ಜನ ಒಗ್ಗಟ್ಟಾಗಿ ರಸ್ತೆಗಿಳಿದು ಹೋರಾಟ ನಡೆಸಿ ತಮಗೆ ಬೇಕಾದ ಪರಿಹಾರ ಪಡೆದುಕೊಳ್ಳುತ್ತಿದ್ದರು. ಆದರೆ ಕೊಡಗಿನ ಜನ ಸ್ವಾಭಿಮಾನಿಗಳಾಗಿದ್ದು, ಅತ್ಯಂತ ಸಹನೆಯಿಂದ ಕಾಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ ಮನೋಭಾವ ಹೀಗೆ ಮುಂದುವರೆದರೆ ಮುಂದೊಂದು ದಿನ ಕೊಡಗಿನ ಜನ ಕೂಡ ಒಗ್ಗಟ್ಟಾಗಿ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಈ ಮೂಲಕ ಎಚ್ಚರಿಕೆ ನೀಡುತ್ತೇವೆ.
ಮಳೆಗಾಲಕ್ಕೂ ಮೊದಲು ಜಿಲ್ಲಾ ಕೇಂದ್ರ ಸ್ಥಾನವಾದ ಮಡಿಕೇರಿ ನಗರದ ಎಲ್ಲಾ ರಸ್ತೆಗಳ ಡಾಂಬರೀಕರಣವನ್ನು ಪೂರ್ಣಗೊಳಿಸಬೇಕು, ನಗರದ ಸ್ಟೋನ್ ಹಿಲ್ ಬಳಿ ಅವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡಲಾಗುತ್ತಿದ್ದು, ಸುತ್ತಮುತ್ತಲ ಬಡಾವಣೆಗಳ ಜನರು ಸಾಂಕ್ರಾಮಿಕ ರೋಗದ ಭೀತಿಯನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ತಕ್ಷಣ ವೈಜ್ಞಾನಿಕ ರೂಪದಲ್ಲಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲೆಯ ಕಾಂಗ್ರೆಸ್ ನಾಯಕರುಗಳು ಉಪಸ್ಥಿತರಿದ್ದರು.


