ಬೆಂಗಳೂರು: ಕೋವಿಡ್ 19 ಆರ್ಭಟಕ್ಕೆ ದೇಶ ಮತ್ತು ರಾಜ್ಯ ತತ್ತರಗೊಂಡಿದ್ದು, ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದೆ.ಶುಕ್ರವಾರ ಒಂದೇ ದಿನ 10 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 180ಕ್ಕೇರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಮೂವರು ಸೇರಿದಂತೆ ಒಟ್ಟು 10 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೂ ಬೆಂಗಳೂರಿನಲ್ಲಿ ಅತಿ ಹೆಚ್ಚು ಎಂಬಂತೆ 81 ಜನ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ರಾಜ್ಯದಲ್ಲಿ ಹೊಸದಾಗಿ 445 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 11005ಕ್ಕೆ ಏರಿಕೆಯಾಗಿದೆ.






