ಬೆಂಗಳೂರು: ಕೊರೋನಾ ಭೀತಿಯ ನಡುವೆಯೂ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಿದೆ. ಶಿಕ್ಷಣ ಇಲಾಖೆ ಎಷ್ಟೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡರೂ ಶನಿವಾರ ಪರೀಕ್ಷೆ ಬರೆದ ಓರ್ವ ವಿದ್ಯಾರ್ಥಿ ಹಾಗೂ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಸ್ಕ್ವಾಡ್ ಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಇಂದು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಯೊಬ್ಬನಿಗೆ ಸೋಂಕಿನ ಯಾವುದೇ ಲಕ್ಷಣಗಳಿರಲಿಲ್ಲ. ಆದರೆ ಈ ಮೊದಲು ಆತ ಡೆಂಗ್ಯೂ ಜ್ವರದ ತಪಾಸಣೆಗೊಳಗಾಗಿದ್ದ. ಅದೇ ಸಂದರ್ಭದಲ್ಲಿ ಕೊರೋನಾ ಸ್ಯಾಂಪಲ್ ಪಡಯಲಾಗಿದ್ದು, ಇಂದು ಪರೀಕ್ಷೆ ಬರೆಯುತ್ತಿದ್ದಾಗ, ಸ್ವೀಕೃತವಾದ ವೈದ್ಯಕೀಯ ವರದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ.
ಕೂಡಲೇ ಆ ವಿದ್ಯಾರ್ಥಿಯನ್ನು ಪ್ರತ್ಯೇಕ ಕೊಠಡಿಗೆ ಸ್ಥಳಾಂತರಿಸಲಾಯಿತು. ಆತನ ಜೊತೆ ಆ ಕೊಠಡಿಯಲ್ಲಿ ಪರೀಕ್ಷೆ ಬರೆಯುತ್ತಿದ್ದ ಇತರೆ 19 ವಿದ್ಯಾರ್ಥಿಗಳನ್ನು ಸಹ ಆರೋಗ್ಯ ಪರೀಕ್ಷೆಗೆ ಒಳಪಡಿಸಲಾಗುತ್ತಿದ್ದು, ಆರೋಗ್ಯ ಇಲಾಖೆ ಅಭಿಪ್ರಾಯದ ಮೇರೆಗೆ ಈ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಅವಕಾಶ ಕಲ್ಪಿಸುವಲ್ಲಿ ಹಾಗೂ ಆ ಎಲ್ಲ ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮ ವಹಿಸುವಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.