ಬೆಂಗಳೂರು:- ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವುದರಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇಲೆ ಹೈಕಮಾಂಡ್ ಗರಂ ಆಗಿದೆ.
ಕರ್ನಾಟಕದಲ್ಲಿ ಕೊರೊನಾ ಸೋಂಕು ಕೆಲವೇ ದಿನಗಳಲ್ಲಿ ಸಮುದಾಯಕ್ಕೂ ಹಬ್ಬಬಹುದೆಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಎಚ್ಚರಿಕೆ ನೀಡಿದ ಬೆನ್ನಲ್ಲೇ ಕೇಂದ್ರ ವರಿಷ್ಠರು ಯಡಿಯುರಪ್ಪ ಹಾಗೂ ಕೆಲ ಸಚಿವರ ಕಾರ್ಯವೈಖರಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ ದೂರವಾಣಿಯಲ್ಲಿ ಕೊರೊನಾ ಸೋಂಕು ಕುರಿತಂತೆ ಮಾಹಿತಿ ಪಡೆದಿದ್ದಾರೆ.
ಕೆಲವೇ ದಿನಗಳ ಹಿಂದೆ ಇಡೀ ದೇಶಕ್ಕೆ ಕೊರೊನಾ ನಿಯಂತ್ರಣ ಮಾಡುವಲ್ಲಿ ಕರ್ನಾಟಕ ಬೇರೆ ರಾಜ್ಯಗಳಿಗೆ ಮಾದರಿಯಾಗಿದೆ ಎಂದು ನಾವೇ ಹೇಳಿದ್ದೆವು. ಇಲ್ಲಿ ಅಳವಡಿಸಿಕೊಂಡಿರುವ ತಂತ್ರಜ್ಞಾನವನ್ನು ಬೇರೆ ರಾಜ್ಯಗಳು ಅನುಸರಿಸಬೇಕೆಂದು ಸಲಹೆ ಮಾಡಿದ್ದೆವು.