janadhvani

Kannada Online News Paper

ಉಳ್ಳಾಲ ಪಾಕಿಸ್ತಾನವಾಗಿದೆ ಎಂಬ ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆಗೆ ಡಿವೈಎಫ್ಐ ಖಂಡನೆ

ಉಳ್ಳಾಲ ( ನ 3 ) : ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪಾಕಿಸ್ತಾನವಾಗಿದೆ ಎಂಬ ಆರ್.ಎಸ್.ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಯನ್ನು ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಖಂಡಿಸಿದೆ.

ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮುಚ್ಚಲು ಇಂತಹ ಹೇಳಿಕೆಯನ್ನು ನೀಡಲಾಗುತ್ತಿದೆ. ಇದು ಫ್ಯಾಸಿಸ್ಟ್ ಶಕ್ತಿಗಳು ಹಿಂದಿನಿಂದಲೂ ಅನುಸರಿಸಿಕೊಂಡು ಬಂದ ತಂತ್ರವಾಗಿದ್ದು ಅಭಿವೃದ್ಧಿಯ ಬಗ್ಗೆ ಹೇಳಿಕೊಳ್ಳಲು ಏನೂ ಇಲ್ಲದಿದ್ದಾಗ ಧರ್ಮ ಸಂಘರ್ಷದ ಮಾತುಗಳನ್ನಾಡಿ ಜನರ ಗಮನ ಬೇರೆಡೆ ತಿರುಗಿಸುವ ತಂತ್ರವನ್ನು ಭಟ್ ನಿರ್ವಹಿಸಿದ್ದಾರೆ.

ಉಳ್ಳಾಲ ತಾಲೂಕಿನಲ್ಲಿ ಕೋವಿಡ್ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳ ಲೂಟಿ ಮಿತಿಮೀರಿದೆ. ಅದೇ ರೀತಿ ಯುವಜನರ ನಿರುದ್ಯೋಗದ ಪ್ರಮಾಣದಲ್ಲೂ ಏರಿಕೆಯಾಗಿದೆ. ಇಂತಹ ನೈಜ ವಿಷಯಗಳ ಬಗ್ಗೆ ಮಾತನಾಡುವುದು ಬಿಟ್ಟು ಪ್ರಭಾಕರ ಭಟ್ ಅಬ್ಬಕ್ಕ ಆಳಿದ ನಾಡನ್ನು ಪಾಕಿಸ್ತಾನ ಎಂದು ಕರೆಯುವ ಮೂಲಕ ತಾಲೂಕನ್ನು ಅವಮಾನಿಸಿದ್ದು ಇವರ ಈ ಹೇಳಿಕೆಯನ್ನು ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಖಂಡಿಸುತ್ತದೆ ಎಂದು ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಅಧ್ಯಕ್ಷ ಅಶ್ರಫ್ ಕೆಸಿ ರೋಡ್ ಮತ್ತು ಕಾರ್ಯದರ್ಶಿ ಸುನಿಲ್ ತೇವುಲ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.