janadhvani

Kannada Online News Paper

ನ.17 ರಿಂದ ಪದವಿ ಕಾಲೇಜುಗಳು ಆರಂಭ- ಅಪರ ಜಿಲ್ಲಾಧಿಕಾರಿ ರೂಪಾ

ಮಂಗಳೂರು : ಪದವಿ ಹಾಗೂ ಸ್ನಾತಕೋತ್ತರ ತರಗತಿಗಳು ನವೆಂಬರ್ 17 ರಿಂದ ಆರಂಭಗೊಳ್ಳಲಿವೆ ಎಂದು ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಂ. ಜೆ ರೂಪ ತಿಳಿಸಿದರು.

ಅವರು ಶುಕ್ರವಾರ ದ.ಕ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಕೋವಿಡ್-19 ಹಿನ್ನಲೆಯಲ್ಲಿ ವಿಶ್ವವಿದ್ಯಾನಿಲಯ, ಖಾಸಗಿ ವಿಶ್ವವಿದ್ಯಾನಿಲಯ, ಸರ್ಕಾರಿ, ತಾಂತ್ರಿಕ, ಡಿಪ್ಲೋಮಾ, ಅನುದಾನ, ಅನುದಾನ ರಹಿತ ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಪ್ರಾಮಾಣಿತ ವಿಧಾನ- ಮಾರ್ಗಸೂಚಿಯ ಕುರಿತ ಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳನ್ನು ನವೆಂಬರ್ 17 ರಿಂದ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ಪ್ರಾರಂಭಿಸಬೇಕೆಂದರು.

ಪ್ರತೀ ದಿನ ಕಾಲೇಜು ಪ್ರವೇಶಕ್ಕೆ ವಿದ್ಯಾರ್ಥಿಗಳು ಹಾಜರಾಗಲು ವಿದ್ಯಾರ್ಥಿಗಳ ಗುಂಪನ್ನು ವಿಂಗಡಣೆ ಮಾಡಿ ದಿನ ನಿತ್ಯ 50% ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಮಾಡಿಕೊಡಬೇಕು ಹಾಗೂ ಉಳಿದ ಪ್ರಥಮ, ದ್ವಿತೀಯ, ಪದವಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳನ್ನು ನಡೆಸುವಂತೆ ಸೂಚಿಸಿದರು.

ತರಗತಿಗೆ ಹಾಜರಾಗುವ ಬೋಧಕರು, ವಿದ್ಯಾರ್ಥಿಗಳು ಹಾಗೂ ಇತರೆ ಸಿಬ್ಬಂದಿಗಳು ಕಡ್ಡಾಯವಾಗಿ 3 ದಿನಗಳ ಮುಂಚಿತವಾಗಿ ಕೋವಿಡ್-19 ಪರೀಕ್ಷೆಯನ್ನು ಮಾಡಿಸಿ, ಪರೀಕ್ಷಾ ವರದಿ ನೆಗೆಟಿವ್ ಇದ್ದಲ್ಲಿ ಮಾತ್ರ ವಿಶ್ವವಿದ್ಯಾಲಯ ಅಥವಾ ಕಾಲೇಜುಗಳಿಗೆ ಹಾಜರಾಗಬೇಕು. ಯಾವುದೇ ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ 1077ನ್ನು ಸಂಪರ್ಕಿಸಬಹುದು ಎಂದರು.

ತರಗತಿಗಳಿಗೆ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಾಗಬೇಕಾಗಿಲ್ಲ. ಹಾಜರಾಗಲು ಇಚ್ಛಿಸದ ವಿದ್ಯಾರ್ಥಿಗಳು ಆನ್‍ಲೈನ್ ತರಗತಿಗಳಲ್ಲಿ ಪಾಲ್ಗೊಳ್ಳಬಹುದಾಗಿದೆ. ಆನ್‍ಲೈನ್ ತರಗತಿಗಳಿಗೆ ಹಾಜರಾಗಲು ಬಯಸುವ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಬಗ್ಗೆ ಇರುವ ಅನುಮಾನ ಅಥವಾ ಸಮಸ್ಯೆಗಳನ್ನು ಬಗೆಹರಿಸಿ ಪ್ರತಿ ದಿನ ಆನ್‍ಲೈನ್ ತರಗತಿಗಳನ್ನು ನಡೆಸಬೇಕೆಂದರು.

ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜು ಪ್ರವೇಶ ಹಾಗೂ ನಿರ್ಗಮನ ಸ್ಥಳಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್‍ಗಳ ವ್ಯವಸ್ಥೆಯನ್ನು ಮಾಡಬೇಕು ಮತ್ತು ಮಾಸ್ಕ್‍ನ್ನು ಭೋದಕ/ಭೋದಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಕಡ್ಡಾಯವಾಗಿ ಧರಿಸಬೇಕೆಂದರು.

ಜ್ವರ, ಕೆಮ್ಮು, ಉಸಿರಾಟದ ಲಕ್ಷಣಗಳನ್ನು ಹೊಂದಿರುವ ಯಾವುದೇ ಭೋದಕ/ಭೋದಕೇತರ ಸಿಬ್ಬಂದಿಗಳಿಗೆ ಶಿಕ್ಷಣ ಸಂಸ್ಥೆಯ ಆವರಣದೊಳಗೆ ಪ್ರವೇಶ ನೀಡುವಂತಿಲ್ಲ. ಹಾಗೂ ಸಂಸ್ಥೆಯ ಸಂಪೂರ್ಣ ಕಟ್ಟಡ, ಮುಖ್ಯದ್ವಾರ, ಶೌಚಾಲಯ ಹಾಗೂ ಎಲ್ಲಾ ಕೊಠಡಿ, ಪಿಠೋಪಕರಣ ಮತ್ತು ಪಠ್ಯ ಸಾಮಾಗ್ರಿಗಳನ್ನು ದಿನನಿತ್ಯ ಸ್ಯಾನಿಟೈಸ್ ಮಾಡಿಸಬೇಕೆಂದರು.

ಕಾಲೇಜುಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮನೆಯಿಂದಲೇ ಊಟ, ಕುಡಿಯುವ ನೀರನ್ನು ತರಬೇಕು ಹಾಗೂ ವಿದ್ಯಾರ್ಥಿಗಳು ಪೆನ್ನು-ಪುಸ್ತಕ, ಲ್ಯಾಪ್‍ಟ್ಯಾಪ್ ಯಾವುದೇ ವಸ್ತುಗಳನ್ನು ಪರಸ್ಪರ ಹಂಚಿಕೊಳ್ಳುವಂತಿಲ್ಲ , ಮತ್ತು ಲೈಬ್ರೆರಿ, ಕ್ಯಾಂಟೀನ್‍ಗಳನ್ನು ತೆರೆಯುವಂತಿಲ್ಲ ಎಂದರು.

ಕಾಲೇಜಿನ ಆವರಣದಲ್ಲಿ ಎಲ್ಲೆಂದರಲ್ಲಿ ಉಗುಳುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು, ವಿದ್ಯಾರ್ಥಿಗಳು, ಉಪನ್ಯಾಸಕರು ಆರೋಗ್ಯ ಸೇತು ಆ್ಯಪ್ ಅನ್ನು ತಮ್ಮ ಮೊಬೈಲ್ ಪೋನ್‍ನಲ್ಲಿ ಇನ್‍ಸ್ಟಾಲ್ ಮಾಡಬೇಕು. ಕೋವಿಡ್ ಸಂಬಂಧಿಸಿದ ಮಾರ್ಗಸೂಚಿಗಳನ್ನು ಹಾಗೂ ಮುಂಜಾಗೃತಾ ಕ್ರಮ ಭಿತ್ತಿ ಪತ್ರಗಳನ್ನು ಸೂಚನ ಫಲಕಗಳಲ್ಲಿ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಸೇವಾಸಿಂಧು ವೆಬ್‍ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಬಸ್‍ಪಾಸ್ ಅನ್ನು ಪಡೆಯಬಹುದು ಗೊಂದಲಪಡುವ ಅವಶ್ಯಕತೆ ಇಲ್ಲ ಎಂದರು.

ಶಿಕ್ಷಕರು, ಅಧಿಕಾರಿ, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಧರಿಸಿಕೊಳ್ಳಬೇಕು ಎಂದರು.

ಸಭೆಯಲ್ಲಿ ದ.ಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮಚಂದ್ರ ಬಾಯರಿ, ವಿಶೇಷ ಅಧಿಕಾರಿ ಶ್ರೀಧರ್, ಡಾ|ದಯಾನಂದ್ ಪೈ ಸತೀಶ್ ಪೈ sಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಜಶೇಖರ್ ಹೆಬ್ಬಾರ್ ಹಾಗೂ ವಿವಿಧ ಖಾಸಗಿ/ಸರಕಾರಿ ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.

error: Content is protected !! Not allowed copy content from janadhvani.com