ಲಖನೌ: ಅಯೋಧ್ಯೆಯಲ್ಲಿ ಮಸೀದಿ ನಿರ್ಮಿಸಲು ನೀಡಿರುವ ನಿವೇಶನ ತಮ್ಮದೆಂದು ಹಕ್ಕು ಮಂಡಿಸಿದ ದಿಲ್ಲಿ ಮೂಲದ ಇಬ್ಬರು ಸಹೋದರಿಯರು ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ರಾಣಿ ಕಪೂರ್ ಅಲಿಯಾಸ್ ರಾಣಿ ಬಲೂಜಾ, ರಮಾರಾಣಿ ಪಂಜಾಬಿ ಎಂಬುವವರು ಅಲಹಾಬಾದ್ ಹೈಕೋರ್ಟ್ನ ಲಖನೌ ಪೀಠಕ್ಕೆ ಈ ಸಂಬಂಧ ಅರ್ಜಿ ಸಲ್ಲಿಸಿದ್ದು, ಫೆ.8ರಂದು ವಿಚಾರಣೆ ನಡೆಯುವ ಸಾಧ್ಯತೆ ಇದೆ.
”ನಮ್ಮ ತಂದೆ ಜ್ಞಾನಚಂದ್ರ ಪಂಜಾಬಿ ಅವರು ದೇಶ ವಿಭಜನೆ ಸಂದರ್ಭದಲ್ಲಿ, 1947ರಲ್ಲಿ ಭಾರತಕ್ಕೆ ಬಂದು, ಅಯೋಧ್ಯೆಯಲ್ಲಿ(ಆಗಿನ ಫೈಜಾಬಾದ್) ನೆಲೆಸಿದ್ದರು. ಧನ್ನಿಪುರ ಗ್ರಾಮದಲ್ಲಿ ತಂದೆಗೆ ನಜುಲ್ ಇಲಾಖೆಯು 28 ಎಕರೆ ಜಮೀನನ್ನು ನೀಡಿತ್ತು. 5 ವರ್ಷಗಳ ಅವಧಿಗೆ ನೀಡಿದ್ದ ಜಮೀನಿನ ಮಾಲೀಕತ್ವ ನಂತರವೂ ಮುಂದುವರಿಯಿತು. ಬಳಿಕ ಕಂದಾಯ ಇಲಾಖೆಯಲ್ಲಿರುವ ಜಮೀನಿಗೆ ಸಂಬಂಧಿಸಿದ ದಾಖಲೆಗಳಲ್ಲಿ ತಂದೆ ಹೆಸರನ್ನು ಸೇರಿಸಲಾಗಿತ್ತು,” ಎಂದು ಅವರು ಅರ್ಜಿಯಲ್ಲಿ ವಿವರಿಸಿದ್ದಾರೆ.







