janadhvani

Kannada Online News Paper

ದ.ಕ.ಜಿಲ್ಲೆಯಲ್ಲಿ ಲಾಕ್‌ಡೌನ್‌ ಸಡಿಲಿಕೆ ಇದ್ದರೂ, ಕಠಿಣ ನಿಯಂತ್ರಣ ಮುಂದುವರಿಕೆ- ಜಿಲ್ಲಾಧಿಕಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ಜಾರಿಯಲ್ಲಿರುವ ಲಾಕ್‌ಡೌನ್‌ ಸಡಿಲಿಕೆ ಆದರೂ ಕೋವಿಡ್‌ ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮಗಳು ಮುಂದುವರಿಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಲಾಕ್‌ ಡೌನ್ ತೆರವು ಕುರಿತಂತೆ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ. ಅದರಲ್ಲಿ ಜೂ.11ರಂದು ಹೊರಡಿಸಿದ ಮಾರ್ಗಸೂಚಿಯನ್ನು ಪಾಲಿಸುವಂತೆ ತಿಳಿಸಲಾಗಿದೆ. ಹಾಗಾಗಿ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿಪಡಿಸಲಾಗಿದೆ. ಆದಾಗ್ಯೂ ಜಿಲ್ಲೆಯಲ್ಲಿ ಸೆಮಿ ಲಾಕ್‌ಡೌನ್ ಮೂಲಕ ಸೋಮವಾರದಿಂದ ಯಾವುದಕ್ಕೆಲ್ಲಾ ವಿನಾಯಿತಿ ನೀಡಬೇಕು ಎಂಬುದರ ಬಗ್ಗೆ ಜನಪ್ರತಿನಿಧಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದರು.

ಜಿಲ್ಲೆಯಲ್ಲಿ ಸೋಂಕಿನ ಸಂಖ್ಯೆ ಹೆಚ್ಚಾಗಿ ಕಾಣುತ್ತಿದೆ. ಆದರೆ ನಮ್ಮ ಜಿಲ್ಲೆಯಲ್ಲಿ ಅತ್ಯಂತ ಹೆಚ್ಚು ಕೋವಿಡ್‌ ಪರೀಕ್ಷೆ ಆಗುತ್ತಿರುವ ಕಾರಣ ಸೋಂಕಿನ ಪ್ರಮಾಣ ಸಹಜವಾಗಿಯೇ ಹೆಚ್ಚಾಗುತ್ತಿದೆ. ಆದರೆ ಜಿಲ್ಲೆಯಲ್ಲಿ ಕೋವಿಡ್‌ ಪಸರಿಸುವ ಪ್ರಮಾಣ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದರು.

ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಕೋವಿಡ್‌ ಪರೀಕ್ಷೆಗಳು ನಡೆಯುತ್ತಿವೆ. ಪ್ರತಿದಿನ ಐದಾರು ಸಾವಿರ ಟೆಸ್ಟ್‌ ಆಗುತ್ತಿದ್ದಲ್ಲಿ ಈಗ 10ರಿಂದ 12 ಸಾವಿರದಷ್ಟು ಟೆಸ್ಟ್‌ಗಳು ನಡೆಯುತ್ತಿವೆ. ಕಳೆದ ಒಂದು ವಾರದ ಅವಧಿಯಲ್ಲಿ ಜಿಲ್ಲೆಯಲ್ಲಿ59,818 ಪರೀಕ್ಷೆಗಳನ್ನು ನಡೆಸಲಾಗಿದೆ.

ಇದೇ ಅವಧಿಯಲ್ಲಿ ಮೈಸೂರಿನಲ್ಲಿ 40 ಸಾವಿರ, ಹಾಸನದಲ್ಲಿ41 ಸಾವಿರ, ತುಮಕೂರಿನಲ್ಲಿ 40 ಸಾವಿರದಷ್ಟು ಪರೀಕ್ಷೆಗಳು ಮಾತ್ರ ನಡೆದಿವೆ. ಈ ಅಂಕಿ ಅಂಶವನ್ನು ಗಮನಿಸಿದಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಿ ಸುಮಾರು ವಾರಕ್ಕೆ 18ರಿಂದ 20 ಸಾವಿರದಷ್ಟು ಹೆಚ್ಚು ಪರೀಕ್ಷೆಗಳು ನಡೆಯುತ್ತಿವೆ ಎಂದು ಅವರು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಗೆ ಆರೋಗ್ಯ ಸೇವೆಯನ್ನು ಪಡೆದುಕೊಳ್ಳಲು ಹೊರ ಜಿಲ್ಲೆಗಳಿಂದ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ಅವರಲ್ಲಿ ಅನೇಕ ಮಂದಿಗೆ ಕೋವಿಡ್‌ ಸೋಂಕು ಕಂಡು ಬರುತ್ತಿರುವುದರಿಂದ ಅವರ ಲೆಕ್ಕ ಕೂಡ ನಮ್ಮ ಜಿಲ್ಲೆಗೆ ಬರುತ್ತಿದೆ. ಆದರೆ ನಮ್ಮಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಇಲ್ಲಿ ಬೆಡ್‌, ಆಕ್ಸಿಜನ್‌, ವೆಂಟಿಲೇಟರ್‌, ಆಂಬ್ಯುಲೆನ್ಸ್‌ ಸಿಗದೇ ಸಾವು ಸಂಭವಿಸಿದ ಯಾವುದೇ ಉದಾಹರಣೆ ಇಲ್ಲ ಎಂದರು.

ಹಂತ ಹಂತವಾಗಿ ಲಾಕ್‌ಡೌನ್ ತೆರವುಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಇನ್ನೊಂದು ವಾರದಲ್ಲಿ ಕಟ್ಟುನಿಟ್ಟಾಗಿ ಎಲ್ಲರೂ ಕೋವಿಡ್ ನಿಯಮ ಪಾಲಿಸಿದರೆ ಪಾಸಿಟಿವಿಟಿ ದರ ಇಳಿಕೆಯಾಗುವ ಸಾಧ್ಯತೆ ಇದೆ. ಅದರೊಂದಿಗೆ ಕೆಲವು ಸೇವೆ, ಸೌಲಭ್ಯದ ಕುರಿತು ವಿನಾಯಿತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಶೇ.12ರಷ್ಟು ಪಾಸಿಟಿವಿಟಿ ರೇಟ್‌ ಇದೆ. ಉಳಿದ ಎಲ್ಲ ತಾಲೂಕುಗಳಲ್ಲಿ ಪಾಸಿಟಿವಿಟಿ ರೇಟ್‌ ಶೇ.6ಕ್ಕಿಂತ ಕಡಿಮೆ ಇದೆ. ಜಿಲ್ಲೆಯಲ್ಲಿ ಕೈಗಾರಿಕೆಗಳು ಜಾಸ್ತಿ ಇರುವುದರಿಂದ ಸಹಜವಾಗಿಯೇ ಜನ ಓಡಾಟ ಜಾಸ್ತಿ ಕಾಣಿಸುತ್ತಿದೆ. ಉಳಿದಂತೆ ಎಲ್ಲನಿಯಮಗಳನ್ನು ಪಾಲಿಸಲಾಗುತ್ತಿದೆ. ಜನ ಸಂಚಾರಕ್ಕೆ ನಿರ್ಬಂಧ ಹಾಕುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರಿಗೂ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ದೇವಸ್ಥಾನ ತೆರೆಯಲು ಅವಕಾಶ ಇಲ್ಲ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೇವಸ್ಥಾನಗಳನ್ನು ತೆರೆಯಲಾಗಿದೆ ಎಂಬ ಸಂದೇಶ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರಿಂದ ಹೊರ ಜಿಲ್ಲೆಗಳಿಂದ ಭಾರಿ ಪ್ರಮಾಣದ ಭಕ್ತರು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಆದರೆ ಮುಂದಿನ ಎರಡು ವಾರಗಳ ಕಾಲ ಯಾವುದೇ ಕಾರಣಕ್ಕೂ ದೇವಸ್ಥಾನವನ್ನು ತೆರೆಯಲು ಅವಕಾಶ ನೀಡುವುದಿಲ್ಲ. ಈ ಹಿಂದಿನಂತೆ ಕೇವಲ ಅಲ್ಲಿನ ಸಿಬ್ಬಂದಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ಇರುತ್ತದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ಸೀಲ್‌ಡೌನ್‌ ಗ್ರಾಮಗಳ ಮೇಲೆ ನಿಗಾ
50ಕ್ಕಿಂತ ಹೆಚ್ಚಿನ ಸಂಖ್ಯೆಯ ಸೋಂಕು ಇರುವ ಜಿಲ್ಲೆಯ 18 ಗ್ರಾಮಗಳನ್ನು ಸೀಲ್‌ಡೌನ್‌ ಮಾಡಲಾಗಿದೆ. ಆದರೆ ಸೋಂಕಿನ ಪ್ರಮಾಣ ಇಳಿಕೆಯಾಗದೆ ಸೀಲ್‌ಡೌನ್‌ ತೆರವು ಮಾಡುವುದಿಲ್ಲ. ಪ್ರಕರಣ ಕಡಿಮೆಯಾದರೆ ಅಲ್ಲಿನ ಸ್ಥಳೀಯಾಡಳಿತದೊಂದಿಗೆ ಚರ್ಚಿಸಿ ಸೀಲ್‌ಡೌನ್‌ ತೆರವುಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರವಾಹ ಎದುರಿಸಲು ಸನ್ನದ್ಧ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಅತ್ಯಂಧಿಕ ಮಳೆ ಬೀಳುತ್ತಿದೆ. ಶನಿವಾರ ನಡೆದ ಮುಖ್ಯಮಂತ್ರಿ ಜತೆಗಿನ ವಿಡಿಯೋ ಸಂವಾದ ಸಂದರ್ಭ ದಕ್ಷಿಣ ಕನ್ನಡ ಜಿಲ್ಲೆಯ ಮಳೆಯ ಸ್ಥಿತಿಗತಿ ಬಗ್ಗೆ, ಕಡಲ್ಕೊರೆತ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ತುರ್ತು ಸಂದರ್ಭದಲ್ಲಿಅಗತ್ಯವಿರುವ ಎಲ್ಲಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಹೋಂ ಗಾರ್ಡ್‌, ಅಗ್ನಿಶಾಮಕ ದಳ ಸೇರಿ ಎಲ್ಲವ್ಯವಸ್ತೆಯನ್ನು ಸನ್ನದ್ಧಗೊಳಿಸಿದ್ದೇವೆ. ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ ವಿತರಿಸುವ ಬಗ್ಗೆಯೂ ಕ್ರಮ ವಹಿಸಲಾಗಿದೆ ಎಂದರು.

error: Content is protected !! Not allowed copy content from janadhvani.com