ಮಂಗಳೂರು: ಕೇರಳದಲ್ಲಿ ಕೊರೋನ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಕಾಣದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆಯ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ವಾರ ವಿಧಿಸಿದಂತೆ ಈ ವಾರವೂ (ಆ.14,15) ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತುಗಳ ಖರೀದಿಗೆ ಈ ಎರಡೂ ದಿನ ಮಧ್ಯಾಹ್ನ 2ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಸಾರ್ವಜನಿಕರು ಈ ಅವಧಿಯಲ್ಲಿ ಅಗತ್ಯ ವಸ್ತುಗಳನ್ನು ಖರೀದಿಸಬಹುದು. ಬಳಿಕ ಅನಗತ್ಯವಾಗಿ ತಿರುಗಾಡಬಾರದು ಎಂದು ತಿಳಿಸಿದ್ದಾರೆ.
ವಾರಾಂತ್ಯ ಕರ್ಫ್ಯೂ ವೇಳೆ ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶವಿಲ್ಲ. ಅಲ್ಲದೆ ಶನಿವಾರ ನಡೆಸಲು ಉದ್ದೇಶಿಸಲಾಗಿದ್ದ ಮಂಗಳೂರು ವಿವಿ ಪದವಿ ಪರೀಕ್ಷೆಯನ್ನು ಕೂಡ ಮುಂದೂಡಲಾಗಿದೆ. ರವಿವಾರ ಸ್ವಾತಂತ್ರೋತ್ಸವವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.