ನವದೆಹಲಿ,ನ.19: ದೇಶದ ಅನ್ನದಾತರು ಕಳೆದ ಒಂದು ವರ್ಷದಿಂದ ವ್ಯಾಪಕ ವಿರೋಧ, ಪ್ರತಿಭಟನೆ ನಡೆಸುತ್ತಾ ಬಂದಿರುವ, ವಿವಾದಾತ್ಮಕ ಮೂರು ಕೃಷ್ಟಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದು ಗೊಳಿಸಿದೆ. ಇಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಮೋದಿ ಅವರು ಈ ಮೂರು ಕಾಯ್ದೆಗಳನ್ನು ರದ್ದು ಗೊಳಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ.
ಗುರು ಪೂರಬ್ ಅಂಗವಾಗಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಈ ಮಹತ್ವದ ಘೋಷಣೆ ಮಾಡಿದ್ದಾರೆ. ರೈತರು ತಮ್ಮ ಪ್ರತಿಭಟನೆಯನ್ನು ವಾಪಾಸು ಪಡೆದು ತಮ್ಮ ಹೊಲಗಳಿಗೆ ಹಿಂತಿರುಗಿ ಕೃಷಿ ಚಟುವಟಿಕೆಯಲ್ಲಿ ತೊಡಗುವಂತೆ ಈ ವೇಳೆ ಮನವಿ ಮಾಡಿದ್ದಾರೆ.
ಕೃಷಿ ಕಾನೂನುಗಳ ಬಗ್ಗೆ ರೈತರ ಒಂದು ವರ್ಗವನ್ನು ಮನವರಿಕೆ ಮಾಡಲು ಸರ್ಕಾರ ವಿಫಲವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ‘ನಿಜವಾದ ಮತ್ತು ಶುದ್ಧ ಹೃದಯದಿಂದ ನಾನು ಭಾರತಕ್ಕೆ ಕ್ಷಮೆಯಾಚಿಸುತ್ತೇನೆ’ ರೈತರಿಗೆ ಕೃಷಿ ಕಾನೂನುಗಳ ಬಗ್ಗೆ ಮನವರಿಕೆ ಮಾಡಲು ನಮಗೆ ಸಾಧ್ಯವಾಗಲಿಲ್ಲ. ಹೀಗಾಗಿ ನಾವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ. ಈ ತಿಂಗಳು ಪ್ರಾರಂಭವಾಗುವ ಸಂಸತ್ತಿನ ಅಧಿವೇಶನದಲ್ಲಿ ನಾವು ಎಲ್ಲಾ ವಿಧಿವಿಧಾನಗಳನ್ನು ಪೂರ್ಣಗೊಳಿಸುತ್ತೇವೆ” ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ನೂತನ ಕೃಷಿ ಕಾಯ್ದೆಗೆ ವಿರುದ್ಧವಾಗಿ ಅನ್ನದಾತರು ಸಿಡಿದೆದ್ದರು.ದೇಶಾದ್ಯಂತ ಉಗ್ರ ಪ್ರತಿಭಟನೆಗಳನ್ನು ನಡೆಸಿದರು. ದೆಹಲಿಯಲ್ಲಿ ಇಂದಿಗೂ ಈ ಕಾಯ್ದೆ ವಿರುದ್ಧ ಪ್ರತಿಭಟನೆಗಳು ನಡೆಯುತ್ತಲೇ ಇವೆ.ಈ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುವ ವೇಳೆ ಅದೆಷ್ಟೋ ರೈತರು ಪ್ರಾಣ ಕಳೆದುಕೊಂಡರು.
ಕೇಂದ್ರ ಸರ್ಕಾರ ರೈತರ ಮನವೊಲಿಸಲು ಸಾಕಷ್ಟು ಪ್ರಯತ್ನಿಸಿತಾದರೂ ಅದರಲ್ಲಿ ಯಶಸ್ವಿಯಾಗಲಿಲ್ಲ. ದೇಶಾದ್ಯಂತ ಪ್ರತಿಭಟನೆಗಳು ನಡೆದವು. ಇದರ ಬೆನ್ನಲ್ಲೇ ಗುರು ಪೂರಬ್ ದಿನದಂದು ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ ಮಾಡಿದ್ದು, ಮೂರು ಕೃಷಿ ಕಾನೂನುಗಳನ್ನು ವಾಪಾಸ್ ಪಡೆಯಲು ತೀರ್ಮಾನಿಸಿದೆ. ಇದರೊಂದಿಗೆ ವರ್ಷಗಳ ರೈತರ ಹೋರಾಟಕ್ಕೆ ಗೆಲುವು ಸಿಕ್ಕಿದೆ.







