janadhvani

Kannada Online News Paper

ಯು.ಟಿ ಖಾದರ್‌ಗೆ ವಿಧಾನಸಭೆ ಪ್ರತಿಪಕ್ಷ ಉಪನಾಯಕ ಸ್ಥಾನ- ಹೈಕಮಾಂಡ್ ಆದೇಶ

ಸಿಎಂ ಇಬ್ರಾಹಿಂ ಬಂಡಾಯದಿಂದ ಸೃಷ್ಟಿಯಾಗುತ್ತಿರುವ ಡ್ಯಾಮೇಜ್‌ ಕಂಟ್ರೋಲ್ ಮಾಡಲು ಮುಂದಾದ ಕಾಂಗ್ರೆಸ್

ಬೆಂಗಳೂರು: ಹಿರಿಯ ಕಾಂಗ್ರೆಸ್ ಶಾಸಕ ಯು.ಟಿ ಖಾದರ್‌ಗೆ ವಿಧಾನಸಭೆ ಪ್ರತಿಪಕ್ಷ ಉಪನಾಯಕ ಸ್ಥಾನ ನೀಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಈ ಕುರಿತಾಗಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಕಾಂಗ್ರೆಸ್‌ನಲ್ಲಿ ಸಿಎಂ ಇಬ್ರಾಹಿಂ ಬಂಡಾಯದಿಂದ ಸೃಷ್ಟಿಯಾಗುತ್ತಿರುವ ಡ್ಯಾಮೇಜ್‌ ಕಂಟ್ರೋಲ್ ಮಾಡಲು ಕಾಂಗ್ರೆಸ್ ಹಿರಿಯ ನಾಯಕರು ಮುಂದಾಗಿದ್ದರು.ಅಲ್ಪಸಂಖ್ಯಾತ ಮುಖಂಡರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂಬ ಒತ್ತಾಯವೂ ಮತ್ತೊಂದು ಕಡೆಯಲ್ಲಿ ಕೇಳಿ ಬಂದಿತ್ತು.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶಾಸಕ ಯು.ಟಿ ಖಾದರ್‌ಗೆ ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಸ್ಥಾನ ನೀಡಲು ನಿರ್ಧಾರ ಮಾಡಿ ಎಐಸಿಸಿಗೂ ಹೆಸರನ್ನು ಕಳಿಸಿ ಕೊಟ್ಟಿದ್ದರು.

ಇದೀಗ ಕಾಂಗ್ರೆಸ್‌ ಹೈಕಮಾಂಡ್ ಈ ಕುರಿತಾಗಿ ಅಧಿಕೃತ ಆದೇಶವನ್ನು ಹೊರಡಿಸಿದೆ. ಯು.ಟಿ ಖಾದರ್ ನಾಲ್ಕು ಬಾರಿ ಶಾಸಕರಾಗಿ ಕಾರ್ಯನಿರ್ವಹಣೆ ಮಾಡಿದ ಅನುಭವ ಇದೆ. ಅಲ್ಲದೆ ಸಿದ್ದರಾಮಯ್ಯ ಆಡಳಿತ ಅವಧಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾಗಿ, ಸಮ್ಮಿಶ್ರ ಸರ್ಕಾರದ ಅವಧಿಯಲ್ಲೂ ವಸತಿ ಮತ್ತು ನಗರಾಭಿವೃದ್ದಿ ಇಲಾಖೆಯ ಸಚಿವರಾಗಿಯೂ ಕಾರ್ಯನಿರ್ವಹಣೆ ಮಾಡಿದ್ದಾರೆ.

ಸದ್ಯ ಸಿಎಂ ಇಬ್ರಾಹಿಂ ಅವರ ಬಂಡಾಯ ಕಾಂಗ್ರೆಸ್‌ಗೆ ತಲೆನೋವಾಗಿದೆ. ಬಹಿರಂಗವಾಗಿ ಅವರು ನೀಡುತ್ತಿರುವ ಹೇಳಿಕೆಗಳು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಅಲ್ಪಸಂಖ್ಯಾತರರನ್ನು ಕಾಂಗ್ರೆಸ್‌ನಲ್ಲಿ ಕಡೆಗಣಿಸಲಾಗುತ್ತಿದೆ ಎಂಬ ಆರೋಪವೂ ಕಾಂಗ್ರೆಸ್‌ನಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಆಗುತ್ತಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಸಿದ್ದರಾಮಯ್ಯ ಮತ್ತು ಡಿಕೆಶಿ ಮುಂದಾಗಿದ್ದು, ಅದರಂತೆ ವಿಧಾನಸಭೆಯಲ್ಲಿ ಪ್ರತಿಪಕ್ಷ ಉಪನಾಯಕ ಸ್ಥಾನ ಇದೀಗ ಖಾದರ್ ಗೆ ದೊರಕಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಜವಾಬ್ದಾರಿ ಹೊತ್ತಿರುವವರು ಯಾರ್ಯಾರು?

ಪ್ರಸ್ತುತ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಕಾರ್ಯನಿರ್ವಹಿಸುತ್ತಿದ್ದಾರೆ. ವಿಧಾನಸಭೆ ವಿಪಕ್ಷ ನಾಯಕನಾಗಿ ಸಿದ್ದರಾಮಯ್ಯನವರಿದ್ದಾರೆ. ಯುಟಿ ಖಾದರ್ ಅವರನ್ನು ವಿಧಾನಸಭೆ ವಿಪಕ್ಷ ಉಪನಾಯಕನಾಗಿ ನೇಮಿಸಲಾಗಿದೆ. ಬಿಕೆ ಹರಿಪ್ರಸಾದ್ ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಎಂ.ಬಿ ಪಾಟೀಲ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿದ್ದಾರೆ.