ನವದೆಹಲಿ,ಫೆ.7-ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವ ಕುರಿತಾಗಿ ಹೈಕೋರ್ಟ್ ನೀಡುವ ತೀರ್ಪಿನ ತನಕ ವಿದ್ಯಾರ್ಥಿಗಳು ಶಾಂತಿ ರೀತಿಯಿಂದ ವರ್ತಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯವು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ನಾನು ಹೆಚ್ಚು ಪ್ರತಿಕ್ರಿಯಿಸಲಾರೆ. ಅಂತಿಮವಾಗಿ ನ್ಯಾಯಾಲಯ ನೀಡುವ ತೀರ್ಪಿಗೆ ಸರ್ಕಾರ ಬದ್ದವಾಗಿರುತ್ತದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಪ್ರಚೋದನೆಗೆ ಒಳಗಾಗದೆ ಸಂಯಮವನ್ನು ಕಾಪಾಡಿಕೊಳ್ಳಬೇಕು. ಅನಗತ್ಯವಾಗಿ ಶಾಲಾಕಾಲೇಜುಗಳ ಬಗ್ಗೆ ಗೊಂದಲ ಸೃಷ್ಟಿಸಿ ಬೇರೆ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆ ಕೊಡಬೇಡಿ ಎಂದು ಕಿವಿಮಾತು ಹೇಳಿದರು.ಹಿಜಾಬ್ ಧರಿಸುವ ಕುರಿತಂತೆ ದೇಶಾದ್ಯಂತ ಚರ್ಚೆಯಾಗಿದೆ. ಕೇರಳ ಮತ್ತು ಮಹಾರಾಷ್ಟ್ರ ನ್ಯಾಯಾಲಯ ಇದರ ಬಗ್ಗೆ ತೀರ್ಪನ್ನು ಕೂಡ ಕೊಟ್ಟಿದೆ. ಕೆಲವು ವಿದ್ಯಾರ್ಥಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಪ್ರಾಯಶಃ ಎರಡುಮೂರು ದಿನದೊಳಗೆ ತೀರ್ಪು ಬರಬಹುದು. ಅಲ್ಲಿಯವರೆಗೆ ಸಂಯಮದಿಂದ ವರ್ತಿಸಬೇಕೆಂದು ಮನವಿ ಮಾಡಿದರು.
ಶಾಲಾಕಾಲೇಜುಗಳಲ್ಲಿ ಸಮವಸ್ತ್ರ ಕುರಿತಾಗಿ ರಾಜ್ಯ ಸರ್ಕಾರ ಮೂರು ದಿನಗಳ ಹಿಂದೆಯಷ್ಟೇ ಅಸೂಚನೆಯನ್ನು ಸಹ ಹೊರಡಿಸಿದೆ. ಆಡಳಿತ ಮಂಡಳಿಯವರು ಹಾಗೂ ಎಸ್ಡಿಎಂಸಿಯವರು ತಮ್ಮ ಕಾಲೇಜು ಅನುಗುಣವಾಗಿ ಸಮವಸ್ತ್ರ ಬಗ್ಗೆ ತೀರ್ಮಾನಿಸುತ್ತಾರೆ ಎಂದರು.







