ಚಾಮರಾಜನಗರ: ಸಮವಸ್ತ್ರ ಸಂಬಂಧಿತ ವಿವಾದ ಉದ್ಭವಿಸಿದ್ದು ಪದವಿ ಪೂರ್ವ ಕಾಲೇಜುಗಳಲ್ಲಿ ಮಾತ್ರ, ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಲ್ಲ ಅವರಿಗೆ ಯಾವುದೇ ರೀತಿಯ ವಸ್ತ್ರ ಧರಿಸಿ ಕಾಲೇಜಿಗೆ ಬರಲು ಅವಕಾಶವಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.
ಕೆಲವೊಂದು ಕಾಲೇಜಿನಲ್ಲಿ ಹೈಕೋರ್ಟ್ ಆದೇಶವನ್ನು ತಪ್ಪಾಗಿ ಅರ್ಥೈಸಿಕೊಂಡು, ಶಿರವಸ್ತ್ರ ಧರಿಸಿದ ಪದವಿ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಇರಿಸಿ, ಪಾಠ, ಪರೀಕ್ಷೆ ನಡೆಸಿದಂತಹಾ ಪ್ರಕರಣಗಳು ಬೆಳಕಿಗೆ ಬಂದಿದ್ದವು, ಇದೀಗ ಸಚಿವರ ಸ್ಪಷ್ಟೀಕರಣದಿಂದಾಗಿ ಗೊಂದಲ ನಿವಾರಣೆಯಾಗಿದೆ.
ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಿದೆ. ಹಾಗಾಗಿ, ನಿಯಮಕ್ಕೆ ಅನುಸಾರವಾಗಿಯೇ ಬರಬೇಕು. ಹಿಜಾಬ್ ಧರಿಸುವುದಕ್ಕೆ ಅವಕಾಶ ಇಲ್ಲ. ಹಿಜಾಬ್ ಕೇಸರಿ ಶಾಲು ವಿಚಾರದಲ್ಲಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಅದನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು’ ಎಂದರು.
ನಾಳೆಯಿಂದ ಕಾಲೇಜುಗಳು ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಅವರು ಈಗಾಗಲೇ ಸಷ್ಟಪಡಿಸಿದ್ದಾರೆ.ವಿದ್ಯಾರ್ಥಿಗಳು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಕೊಡದೆ, ಸೌಹಾರ್ದತೆಯಿಂದ ಕಾಲೇಜುಗಳಿಗೆ ಹಾಜರಾಗಬೇಕು ಎಂದು ಮನವಿ ಮಾಡಿದರು.







