ವಿಜಯಪುರ: ಹಿಜಾಬ್ – ಕೇಸರಿ ಶಾಲು ವಿವಾದ ಜೀವಂತವಾಗಿರುವ ಮಧ್ಯೆಯೇ ಜಿಲ್ಲೆಯ ಇಂಡಿ ಪಟ್ಟಣದ ಕಾಲೇಜುಗಳಲ್ಲಿ ಈಗ ಸಿಂಧೂರ ವಿವಾದ ತಲೆ ಎತ್ತಿದೆ. ಇಂಡಿ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಣೆಗೆ ಕುಂಕುಮ ಹಚ್ಚಿಕೊಂಡು ಬಂದ ಓರ್ವ ವಿದ್ಯಾರ್ಥಿಗೆ ಕುಂಕುಮ ಅಳಿಸಿ ಕಾಲೇಜು ಪ್ರವೇಶಿಸುವಂತೆ ಉಪನ್ಯಾಸಕರು ತಾಕೀತು ಮಾಡಿದ್ದಾರೆ. ಇದಕ್ಕೆ ವಿದ್ಯಾರ್ಥಿ ಒಪ್ಪದಿದ್ದಾಗ ಕಾಲೇಜು ಪ್ರವೇಶ ನಿರಾಕರಿಸಲಾಗಿದೆ.
ಎಂದಿನಂತೆ ಕಾಲೇಜಿಗೆ ಬಂದ ವಿದ್ಯಾರ್ಥಿ ಗಂಗಾಧರ ಬಡಿಗೇರ್ ಹಣೆಗೆ ಸಿಂಧೂರ ಧರಿಸಿದ್ದ ಇದನ್ನು ಗಮನಿಸಿದ ಕಾಲೇಜಿನ ದೈಹಿಕ ಉಪನ್ಯಾಸಕ ಸಂಗಮೇಶ ಗೌಡ ತರಗತಿ ಪ್ರವೇಶಕ್ಕೆ ಅವಕಾಶ ಕೊಟ್ಟಿಲ್ಲ. ಈ ವೇಳೆ ಇವರಿಬ್ಬರ ನಡುವೆ ಮಾತಿನ ಚಕಮಕಿ ಆರಂಭವಾಗಿದೆ. ಹಣೆಗೆ ಕುಂಕುಮ ಹಚ್ಚಿಕೊಂಡು ಬರುವುದು ಕೂಡ ಮತ್ತಷ್ಟು ಸಮಸ್ಯೆಗೆ ಕಾರಣ ಎಂದು ಸಿಂಧೂರ ಹಚ್ಚಿಕೊಂಡು ಬಂದ ವಿದ್ಯಾರ್ಥಿಗೆ ಕಾಲೇಜಿನ ದೈಹಿಕ ನಿರ್ದೇಶಕರು ಸಲಹೆ ನೀಡಿದಾಗ ವಿದ್ಯಾರ್ಥಿ ಹಾಗೂ ಉಪನ್ಯಾಸಕರ ಮಧ್ಯೆ ವಾಗ್ವಾದವಾಗಿದೆ.
ಈ ವೇಳೆ ಕಾಲೇಜಿನ ದೈಹಿಕ ಉಪನ್ಯಾಸಕ ಸಂಗಮೇಶಗೌಡ ಹಾಗೂ ಪದವಿ ವಿದ್ಯಾರ್ಥಿ ಗಂಗಾಧರ ಬಡಿಗೇರ ನಡುವೆ ಮಾತಿನ ಚಕಮಕಿ ನಡೆದಿದ್ದು, ಹಿಜಾಬ್ ಹಾಗೂ ಕೇಸರಿ ಶಾಲು ಹೊರತು ಪಡಿಸಿ ಹಣೆಗೆ ಕುಂಕುಮ, ನಾಮ ಹಾಕಿ ಬರಬೇಡಿ ಎಂದರೆ ಹೇಗೆ. ನಮ್ಮ ಪಾರಂಪರಿಕ ಸಾಂಸ್ಕೃತಿಕ ಸಂಕೇತವಾಗಿರುವ ಸಿಂಧೂರ ತಿಲಕಕ್ಕೆ ಯಾಕೆ ಅನುಮತಿ ಇಲ್ಲ ಎಂದು ವಿದ್ಯಾರ್ಥಿ ಪಟ್ಟು ಹಿಡಿದಿದ್ದಾನೆ. ವಿಷಯ ತಿಳಿದ ಇತರೆ ಉಪನ್ಯಾಸಕರು, ಪೊಲೀಸರು ಸ್ಥಳಕ್ಕೆ ತೆರಳಿ ವಿದ್ಯಾರ್ಥಿಯ ಮನವೊಲಿಸಲು ಪ್ರಯತ್ನ ಪಟ್ಟಿದ್ದಾರೆ. ಆದರೆ ಉಪನ್ಯಾಸಕರ ವಾದಕ್ಕೆ ಒಪ್ಪದ ಗಂಗಾಧರ ಬಡಿಗೇರ್ನನ್ನು ಮನೆಗೆ ಕಳುಹಿಸಿದ್ದಾರೆ.
ಬಳಿಕ ಗಂಗಾಧರ ಬಡಿಗೇರ್ ಅಡ್ಡವಾಗಿ ಕುಂಕುಮ ಹಚ್ಚಿಕೊಂಡು ಬಂದಿದ್ದಾನೆ ಇದಕ್ಕೆ ಯಾಕೆ ಅವಕಾಶ ಕೊಟ್ಟಿಲ್ಲ ಎಂದು ಇತರ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಗೊಂದಲದ ವಾತಾವರಣವನ್ನು ತಿಳಿಗೊಳಿಸಿದರು







