ವಾರಾಣಸಿ: ವಾರಣಾಸಿಯ ಮತ ಎಣಿಕೆ ಕೇಂದ್ರಗಳಿಂದ ವಿದ್ಯುನ್ಮಾನ ಮತಯಂತ್ರ(EVM)ಗಳನ್ನು ಕಳ್ಳತನ ಮಾಡಿ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಸಮಾಜವಾದಿ ಪಕ್ಷ ಮಂಗಳವಾರ ಆರೋಪಿಸಿತ್ತು. ಟ್ರಕ್ನಲ್ಲಿ ಇರಿಸಲಾಗಿದ್ದ ಯಂತ್ರಗಳನ್ನು ಮತ ಎಣಿಕೆಗೆ ಎರಡು ದಿನಗಳ ಮೊದಲು ಹೊರತೆಗೆಯಲಾಗಿದೆ ಎಂದು ಆರೋಪಿಸಲಾಗಿದ್ದು, ಸಮಾಜವಾದಿ ಪಕ್ಷ ಮತ್ತು ಅದರ ಮಿತ್ರಪಕ್ಷಗಳ ಬೆಂಬಲಿಗರು ಇವಿಎಂಗಳನ್ನು ಕಳ್ಳತನ ಮಾಡುತ್ತಿರುವ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಿದ್ದಾರೆ.
EVM मूवमेंट में चुनाव आयोग के प्रोटोकॉल का पालन नहीं किया गया- कमिश्नर वाराणसी
कई जिलों में ईवीएम में हेरा-फेरी की जानकारी प्राप्त हो रही है। ये किसके इशारे पर हो रहा है? क्या अधिकारियों पर सीएम ऑफिस से दबाव बनाया जा रहा है?
चुनाव आयोग कृपया स्पष्ट करे @ECISVEEP @ceoup pic.twitter.com/D71xr8h8Tu
— Samajwadi Party (@samajwadiparty) March 9, 2022
ಈ ಬಗ್ಗೆ ಟ್ವೀಟ್ ಮಾಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ವಾರಾಣಸಿಯಲ್ಲಿ ಇವಿಎಂ ತೆಗೆದುಕೊಂಡು ಹೋಗುತ್ತಿರುವ ಸುದ್ದಿ ಉತ್ತರ ಪ್ರದೇಶದ ಪ್ರತಿ ವಿಧಾನಸಭೆ ವ್ಯಾಪ್ತಿಯಲ್ಲೂ ಎಚ್ಚರಿಕೆಯಿಂದ ಇರುವಂತೆ ಸಂದೇಶ ನೀಡುತ್ತಿದೆ. ಮತ ಎಣಿಕೆಯಲ್ಲಿ ಅಕ್ರಮವೆಸಗುವ ಪ್ರಯತ್ನವನ್ನು ವಿಫಲಗೊಳಿಸಲು ಎಸ್ಪಿ-ಮೈತ್ರಿಕೂಟದ ಎಲ್ಲಾ ಅಭ್ಯರ್ಥಿಗಳು ಮತ್ತು ಬೆಂಬಲಿಗರು ತಮ್ಮ ಕ್ಯಾಮೆರಾಗಳೊಂದಿಗೆ ಸಿದ್ಧರಾಗಿರಬೇಕು. ಯುವ ಪ್ರಜಾಪ್ರಭುತ್ವ ಮತ್ತು ಭವಿಷ್ಯವನ್ನು ರಕ್ಷಿಸಲು, ಮತ ಎಣಿಕೆಯಲ್ಲಿ ಸೈನಿಕರಂತೆ ಕೆಲಸ ನಿರ್ವಹಿಸಿ ಎಂದು ಟ್ವೀಟ್ ಮಾಡಿದ್ದಾರೆ.
ಉತ್ತರಪ್ರದೇಶದ ವಾರಣಾಸಿಯಲ್ಲಿ ಅಕ್ರಮವಾಗಿ ಇವಿಎಂ ಸಾಗಿಸಲಾಗಿದೆ ಎಂಬ ಅಖಿಲೇಶ್ ಯಾದವ್ ಅವರ ಆರೋಪದ ಬೆನ್ನಲ್ಲೇ ಅಧಿಕಾರಿಯೊಬ್ಬರು ಇವಿಎಂನಲ್ಲಿ ಲೋಪ ಮಾಡಿರುವುದಾಗಿ ಒಪ್ಪಿಕೊಂಡಿರುವ ವೀಡಿಯೋವೊಂದನ್ನು ಸಮಾಜವಾದಿ ಪಕ್ಷದ ನಾಯಕರು ಟ್ವೀಟ್ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅಖಿಲೇಶ್ ಯಾದವ್, ವಾರಾಣಸಿಯ ಡಿಎಂ ಸ್ಥಳೀಯ ಅಭ್ಯರ್ಥಿಗಳಿಗೆ ಮಾಹಿತಿ ನೀಡದೆಯೇ ಮತಗಟ್ಟೆಗಳಿಂದ ಇವಿಎಂ ಸಾಗಿಸುತ್ತಿದ್ದಾರೆ. ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮಾರ್ಚ್ 10 ರಂದು ನಡೆಯಲಿರುವ ಮತ ಎಣಿಕೆಗೂ ಮುನ್ನ ಉತ್ತರ ಪ್ರದೇಶದ ವಾರಾಣಸಿಯಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು (ಇವಿಎಂ) ಅಕ್ರಮವಾಗಿ ಸಾಗಿಸಲಾಗಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಆರೋಪಿಸಿದ್ದರು. ಇದಕ್ಕೆ ಪೂರಕವೆಂಬಂತೆ ಸಮಾಜವಾದಿ ಪಕ್ಷ ಇಂದು ಬೆಳಿಗ್ಗೆ ವಿಡಿಯೋವೊಂದನ್ನು ಟ್ವೀಟ್ ಮಾಡಿದೆ. ಇದರಲ್ಲಿ ವಾರಾಣಸಿಯ ಆಯುಕ್ತ ದೀಪಕ್ ಅಗರ್ವಾಲ್ ಅವರು ಇವಿಎಂಗಳ ಚಲನೆಯಲ್ಲಿ ಪ್ರೋಟೋಕಾಲ್ನಲ್ಲಿ ಲೋಪವಾಗಿದೆ ಎಂದು ಸುದ್ದಿಗಾರರಿಗೆ ಹೇಳುತ್ತಿರುವುದನ್ನು ನೋಡಬಹುದು. ತಕ್ಷಣ ತಿದ್ದಿಕೊಂಡ ಅವರು ಆ ಇವಿಎಂಗಳನ್ನು ತರಬೇತಿಗಾಗಿ ಮಾತ್ರ ಬಳಸಲಾಗುತ್ತದೆ ಎಂದು ಹೇಳಿದ್ದಾರೆ.
ಇವಿಎಂಗಳ ಸಂಚಾರಕ್ಕೆ ಪ್ರೋಟೋಕಾಲ್ ಬಗ್ಗೆ ಮಾತನಾಡುವುದಾದರೆ ಪ್ರೋಟೋಕಾಲ್ನಲ್ಲಿ ಲೋಪವಾಗಿದೆ ಎಂಬುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ, ಚುನಾವಣೆಯಲ್ಲಿ ಬಳಸುವ ಯಂತ್ರಗಳನ್ನು ತೆಗೆದುಕೊಂಡು ಹೋಗುವುದು ಅಸಾಧ್ಯ ಎಂಬುದನ್ನು ನಾನು ಸ್ಪಷ್ಟಪಡಿಸುತ್ತೇನೆ. ರಾಜಕೀಯ ಪಕ್ಷದ ಕಾರ್ಯಕರ್ತರು ಮತ ಕೇಂದ್ರಗಳ ಹೊರಗೆ ಕುಳಿತುಕೊಂಡು ಗಮನಿಸಬಹುದು ಎಂದಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಿಂದ ಇವಿಎಂ ಟ್ಯಾಂಪರಿಂಗ್ ಬಗ್ಗೆ ಮಾಹಿತಿ ಬರುತ್ತಿವೆ ಎಂದು ಸಮಾಜವಾದಿ ಪಕ್ಷ ತನ್ನ ಟ್ವೀಟ್ನಲ್ಲಿ ಹೇಳಿಕೊಂಡಿದೆ. ಯಾರ ಇಚ್ಛೆಯ ಮೇರೆಗೆ ಇದು ನಡೆಯುತ್ತಿದೆ? ಮುಖ್ಯಮಂತ್ರಿ ಕಚೇರಿಯಿಂದ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆಯೇ? ಎಂಬುದನ್ನು ಚುನಾವಣಾ ಆಯೋಗ ದಯವಿಟ್ಟು ಸ್ಪಷ್ಟಪಡಿಸಬೇಕು ಎಂದು ಅಖಿಲೇಶ್ ಯಾದವ್ ಒತ್ತಾಯಿಸಿದ್ದಾರೆ.
ಸಮಾಜವಾದಿ ಪಕ್ಷದ ಎಲ್ಲಾ ಆರೋಪಗಳನ್ನು ಬಿಜೆಪಿ ನಿರಾಕರಿಸಿದೆ. ಫೆಬ್ರವರಿ ಮತ್ತು ಮಾರ್ಚ್ನಲ್ಲಿ ಏಳು ಹಂತದಲ್ಲಿ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆ ನಡೆದಿತ್ತು. ಮಾರ್ಚ್ 10ರಂದು ಮತಗಳ ಎಣಿಕೆ ನಡೆಯಲಿದೆ. ಚುನಾವಣೋತ್ತರ ಸಮೀಕ್ಷೆಗಳು ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ.







