ಹೈದರಾಬಾದ್: ವಾರಾಣಸಿಯ ಜ್ಞಾನವಾಪಿ ಮಸೀದಿಯ ಕುರಿತು ನ್ಯಾಯಾಲಯ ನೀಡಿರುವ ತೀರ್ಪು 1991ರ ಆರಾಧನಾ ಸ್ಥಳಗಳ ಕಾಯ್ದೆಯ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ಆಲ್ ಇಂಡಿಯಾ ಮಜ್ಲಿಸ್- ಇ- ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸದುದ್ದೀನ್ ಉವೈಸಿ ಆರೋಪಿಸಿದ್ದಾರೆ.
ಕಾಶಿ ವಿಶ್ವನಾಥ ದೇವಸ್ಥಾನ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಒಳಗೆ ವಿಡಿಯೋ ಪರಿಶೀಲನೆ ನಡೆಸುವ ಕಾರ್ಯ ಮುಂದುವರಿಸಬೇಕು ಮತ್ತು ಮೇ 17ರ ವೇಳೆಗೆ ವರದಿ ಸಲ್ಲಿಸಬೇಕು ಎಂದು ಅರ್ಜಿ ವಿಚಾರಣೆ ಬಳಿಕ ವಾರಾಣಸಿ ನ್ಯಾಯಾಲಯ ಆದೇಶ ನೀಡಿತ್ತು. ಸಮೀಕ್ಷೆ ಕಾರ್ಯದ ಉಸ್ತುವಾರಿಗೆ ಇನ್ನೂ ಇಬ್ಬರು ವಕೀಲರನ್ನು ಆಯುಕ್ತರನ್ನಾಗಿ ಕೋರ್ಟ್ ನೇಮಿಸಿತ್ತು. ಇದರ ನಂತರ ಓವೈಸಿ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೋರ್ಟ್ನ ನಿರ್ಧಾರವು ಬಾಬ್ರಿ ಮಸೀದಿ ವಿವಾದ ಕುರಿತಾದ ಸುಪ್ರೀಂಕೋರ್ಟ್ ಮಹತ್ವದ ತೀರ್ಪಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಉವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಕೋರ್ಟ್ ಆದೇಶವು 1991ರ ಆರಾಧನಾ ಸ್ಥಳದ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಇದು ಬಾಬ್ರಿ ಮಸೀದಿ ಭೂ ವಿವಾದ ಕುರಿತಾಗಿ ಸುಪ್ರೀಂಕೋರ್ಟ್ ನೀಡಿದ ಆದೇಶದ ಉಲ್ಲಂಘನೆಯಾಗಿದೆ” ಎಂದು ಹೇಳಿದ್ದಾರೆ. ಬಾಬ್ರಿ ಮಸೀದಿ ಬಳಿಕ ಮತ್ತೊಂದು ಮಸೀದಿಯನ್ನು ಕಳೆದುಕೊಳ್ಳಲು ನಾವು ಬಯಸುವುದಿಲ್ಲ ಎಂದು ತಿಳಿಸಿದ್ದಾರೆ.
“ಇದು ಸಂಪೂರ್ಣ ಉಲ್ಲಂಘನೆಯಾಗಿದೆ ಮತ್ತು ಇದರ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹಾಗೂ ಮಸೀದಿ ಸಮಿತಿಗಳು ಸುಪ್ರೀಂಕೋರ್ಟ್ಗೆ ಹೋಗಲಿವೆ ಎಂದು ನಾನು ಆಶಿಸುತ್ತೇನೆ ” ಎಂದು ಅವರು ಹೇಳಿದ್ದಾರೆ.
ಧಾರ್ಮಿಕ ಸ್ಥಳಗಳ ಸ್ವರೂಪವನ್ನು ಬದಲಿಸಲು ಪ್ರಯತ್ನಿಸುತ್ತಿರುವ ಜನರ ವಿರುದ್ಧ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಕೂಡಲೇ ಎಫ್ಐಆರ್ ದಾಖಲು ಮಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.
“1947ರ ಆಗಸ್ಟ್ 15ರ ಬಳಿಕದ ಯಾವುದೇ ಧಾರ್ಮಿಕ ಸ್ಥಳಗಳ ಸ್ವರೂಪವನ್ನು ಬದಲಿಸಲು ಪ್ರಯತ್ನಿಸುವ ಯಾವುದೇ ವ್ಯಕ್ತಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ 1991ರ ಕಾಯ್ದೆ ಸ್ಪಷ್ಟವಾಗಿ ಹೇಳಿರುವುದರಿಂದ, ಯೋಗಿ ಸರ್ಕಾರ ಕೂಡಲೇ ಎಫ್ಐಆರ್ ದಾಖಲು ಮಾಡಬೇಕು. ಅವರು ತಪ್ಪಿತಸ್ಥರು ಎಂದು ಕೋರ್ಟ್ಗೆ ಕಂಡುಬಂದರೆ ಅವರ ಮೇಲೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು” ಎಂದು ಉವೈಸಿ ಹೇಳಿದ್ದಾರೆ.
ಕಾಶಿ ವಿಶ್ವನಾಥ ದೇವಸ್ಥಾನಕ್ಕೆಅಂಟಿಕೊಂಡಂತಿರುವ ಜ್ಞಾನವಾಪಿ ಮಸೀದಿಯ ಪಶ್ಚಿಮ ಭಾಗದ ಗೋಡೆಯ ಭಾಗದಲ್ಲಿ ಇರುವ ಹಿಂದೂ ದೇವತೆಗಳ ವಿಗ್ರಹಗಳನ್ನು ವರ್ಷಪೂರ್ತಿ ಆರಾಧನೆ ಮಾಡಲು ಅವಕಾಶ ನೀಡುವಂತೆ ಐವರು ಮಹಿಳೆಯರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಮಸೀದಿಯ ಒಳಗೆ ಮತ್ತು ಹೊರಗೆ ಸಮೀಕ್ಷೆ ನಡೆಸಲು ಕೋರ್ಟ್ ಸೂಚನೆ ನೀಡಿತ್ತು. ಕೋರ್ಟ್ ಕಮಿಷನರ್ ಅಜಯ್ ಮಿಶ್ರಾ ಅವರನ್ನು ತೆಗೆದುಹಾಕಲು ಗುರುವಾರ ನಿರಾಕರಿಸಿದ್ದ ನ್ಯಾಯಾಲಯ, ಇನ್ನೂ ಇಬ್ಬರು ಕಮಿಷನರ್ಗಳನ್ನು ನೇಮಿಸಿತ್ತು. ಜತೆಗೆ ಜ್ಞಾನವಾಪಿ ಮಸೀದಿಯಲ್ಲಿನ ತಪಾಸಣೆ ಮುಂದುವರಿಸಬೇಕು ಹಾಗೂ ಮೇ 17ರ ಒಳಗೆ ವರದಿ ನೀಡಬೇಕು ಎಂದು ಸೂಚನೆ ನೀಡಿತ್ತು. ಈ ಕಾರ್ಯಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆದೇಶ ನೀಡಿತ್ತು.