janadhvani

Kannada Online News Paper

ಕುದುರೆ ವ್ಯಾಪಾರಕ್ಕೆ ಕುಮ್ಮಕ್ಕು ನೀಡಿದ ರಾಜ್ಯಪಾಲ-ಕಾಂಗ್ರೆಸ್,ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್‌. ಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಇತ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆಸುತ್ತಿದೆ.

ರಾಜಭವನದಲ್ಲಿ ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿದ ಅರ್ಧಗಂಟೆ ಬಳಿಕ ಸಿದ್ದರಾಮಯ್ಯ, ಜಿ. ಪರಮೇಶ್ವರ್‌, ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ನಾಯಕ ಗುಲಾಂ ನಭಿ ಆಜಾದ್‌ ಅವರ ನೇತೃತ್ವದಲ್ಲಿ ಪ್ರತಿಭಟನೆಗೆ ಕುಳಿತಿದ್ದಾರೆ.

ಎಚ್.ಕೆ.ಪಾಟೀಲ, ಮಲ್ಲಿಕಾರ್ಜುನ ಪಾಟೀಲ,ಹ್ಯಾರಿಸ್, ಕೃಷ್ಟ ಭೈರೇಗೌಡ, ಜಮಿರ್ ಅಹ್ಮದ್, ಎಚ್.ಡಿ.ರೇವಣ್ಣ, ರಮೇಶ್ ಜಾರಕಿಹೊಳಿ, ಅಶೋಖ್‌ ಗೆಹ್ಲೋಟ್, ಸಂಸದ ರಾಜೀವ ಗೌಡ, ಆರ್.ವಿ.ದೇಶಪಾಂಡೆ, ಕೆ.ಜೆ.ಜಾರ್ಜ್ ಸೇರಿದಂತೆ ಕಾಂಗ್ರೆಸ್‌ ಮುಖಂಡರು ಇದ್ದಾರೆ. ಪ್ರತಿಭಟನೆಗೆ ಜೆಡಿಎಸ್‌ನ ಸದಸ್ಯರೂ ಸಾಥ್‌ ನೀಡಿದ್ದಾರೆ.ರಾಣೆಬೆನ್ನೂರಿನ ಕೆಪಿಜೆಪಿ ಶಾಸಕ ಶಂಕರ್ ಸಹ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಈ ವೇಳೆ ಸಿದ್ದರಾಮಯ್ಯ ಸೇರಿದಂತೆ ಮುಖಂಡರು ಅಲ್ಲಿ ಕುಳಿತು ಪತ್ರಿಕೆಗಳನ್ನು ಓದುತ್ತಿದ್ದಾರೆ. ಮುಖಂಡರು ಕಪ್ಪು ಪಟ್ಟಿ ಧರಿಸಿ, ಗಾಂಧಿ ಟೋಪಿ ಹಾಕಿ ಪ್ರತಿಭಟನೆ ಮುಂದುವರಿಸಿದ್ದಾರೆ.ವಿಧಾನಸೌಧ ಪಶ್ಚಿಮ ಗೇಟ್ ಎದುರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯಪಾಲ, ಪ್ರಧಾನಿ, ಬಿಎಸ್‌ವೈ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

‘ಕುದುರೆ ವ್ಯಾಪಾರಕ್ಕೆ ಕುಮ್ಮಕ್ಕು’

ರಾಜಭವನ ಬಿಜೆಪಿ ಭವನ ಆಗಿದೆ. ರಾತ್ರೋರಾತ್ರಿ ಪ್ರಮಾಣ ವಚನಕ್ಕೆ ಅವಕಾಶ ನೀಡುವ ಮೂಲಕ ರಾಜ್ಯಪಾಲರು ಕುದುರೆ ವ್ಯಾಪಾರಕ್ಕೆ ಕುಮ್ಮಕ್ಕು ನೀಡಿದ್ದಾರೆ. ಕುಮಾರಸ್ವಾಮಿ ಸಿಎಂ ಆಗುವವರೆಗೂ ಪ್ರತಿಭಟನೆ ನಡೆಸಲಿದ್ದೇವೆ. ರಾಜ್ಯಾದ್ಯಂತ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಿದ್ದಾರೆ ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್‌ ಪ್ರಕಾಶ್ ಹೇಳಿದರು.

error: Content is protected !! Not allowed copy content from janadhvani.com