ಬೆಂಗಳೂರು: ರಾಜ್ಯದಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಬುಧವಾರ ನಾಡಿನ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ ಎಂದು ಹೇಳಿದ್ದಾರೆ.
1973 ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸುತ್ತೇನೆ. ಮತ್ತೊಮ್ಮೆ ತಮ್ಮೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿ, ಜಗದಗಲ ಹಬ್ಬಲಿ ಕರ್ನಾಟಕ ಸಂಭ್ರಮ, ಮೊಳಗಲಿ ಕನ್ನಡ ಡಿಂಡಿಮ. ವಿಶ್ವದಾದ್ಯಂತ ನೆಲೆಸಿರುವ ಸಮಸ್ತ ಹೆಮ್ಮೆಯ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟ್ವೀಟ್ ಮಾಡಿ, ನಾಡಿನ ಏಕೀಕರಣಕ್ಕೆ ಹೋರಾಡಿದ ಎಲ್ಲ ಮಹನೀಯರ ಸಂಸ್ಮರಣೆಗಳ ಜೊತೆಗೆ ಕನ್ನಡ ಉಳಿಸುವ, ಬೆಳೆಸುವ ದೃಢಸಂಕಲ್ಪ ಸದಾ ನಮ್ಮದಾಗಿರಲಿ. ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಅಭಿಮಾನಪೂರ್ವಕ ಶುಭಾಶಯಗಳು ಎಂದು ಹೇಳಿದ್ದಾರೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವವನ್ನು ಪ್ರತಿ ವರ್ಷದ ನವೆಂಬರ್ 1 ರಂದು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ 1956ರ ನವೆಂಬರ್ 1ರಂದು ಮೈಸೂರು ರಾಜ್ಯವೆಂದು ಘೋಷಣೆ ಮಾಡಲಾಯಿತು.
ಮೈಸೂರು ರಾಜ್ಯ ನಿರ್ಮಾಣವಾದುದರ ಸಂಕೇತವಾಗಿ ಪ್ರತಿ ವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ವಿಶ್ವದಾದ್ಯಂತ ನೆಲಸಿರುವ ಕನ್ನಡಿಗರು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಾರೆ.
ಈ ದಿನದಂದು ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. 1956 ರ ನವೆಂಬರ್ 1 ರಂದು, ಮದ್ರಾಸ್, ಮುಂಬಯಿ, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು. ಹಾಗೂ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪುಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು.
ನವೆಂಬರ್ 1, 1973 ರಂದು ಮೈಸೂರು ರಾಜ್ಯಕ್ಕೆ “ಕರ್ನಾಟಕ” ಎಂದು ನಾಮಕರಣ ಮಾಡಲಾಯಿತು. ಈ ವರ್ಷ ಕರ್ನಾಟಕವೆಂದು ನಾಮಕರಣ ಮಾಡಿ 50 ವರ್ಷವಾದ ಹಿನ್ನೆಲೆಯಲ್ಲಿ ಕರ್ನಾಟಕ-50 ಎಂಬ ಶಿರ್ಷಿಕೆ ಅಡಿಯಲ್ಲಿ ಸರ್ಕಾರ ವಿಶೇಷವಾಗಿ ರಾಜ್ಯೋತ್ಸವ ಆಚರಿಸಲು ನಿರ್ಧರಿಸಿದೆ. ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ