ನವದೆಹಲಿ | ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ ನೀಡಿದೆ. ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ವಿವಿಧ ಸಂಘಟನೆಗಳು ಸಲ್ಲಿಸಿರುವ ಅರ್ಜಿಗಳಲ್ಲಿ ವಕ್ಫ್ ಆಸ್ತಿಗಳನ್ನು ಡಿನೋಟಿಫೈ ಮಾಡದಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ನಾಳೆ ಮಧ್ಯಾಹ್ನ ವಿಚಾರಣೆ ಮತ್ತೆ ಮುಂದುವರಿಯಲಿದೆ.
ನ್ಯಾಯಾಲಯ ಇಂದು ಮೂರು ಸಲಹೆಗಳನ್ನು ಮುಂದಿಟ್ಟಿದೆ. ಮುಖ್ಯ ಸಲಹೆಯೆಂದರೆ, ನ್ಯಾಯಾಲಯಗಳು ವಕ್ಫ್ ಎಂದು ಘೋಷಿಸಿದ ಆಸ್ತಿಗಳು, ಅವು ವಕ್ಫ್-ಬೈ-ಯೂಸರ್ ಆಗಿರಲಿ ಅಥವಾ ಲಿಖಿತ ವಕ್ಫ್ ಆಸ್ತಿಯಾಗಿರಲಿ, ವಕ್ಫ್ ಕಾಯ್ದೆಗೆ ತಿದ್ದುಪಡಿ ವಿರುದ್ಧದ ಅರ್ಜಿಗಳನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿರುವ ಅವಧಿಯಲ್ಲಿ ವಕ್ಫ್ ಪಟ್ಟಿಯಿಂದ ಹೊರಗಿಡಬಾರದು. ಜಿಲ್ಲಾಧಿಕಾರಿಗಳು ಆ ಆಸ್ತಿ ಸರ್ಕಾರಿ ಭೂಮಿಯೇ ಎಂದು ತನಿಖೆ ನಡೆಸುವ ಅವಧಿಯಲ್ಲಿ ಆಸ್ತಿಯನ್ನು ವಕ್ಫ್ ಆಸ್ತಿ ಎಂದು ಪರಿಗಣಿಸಲಾಗುವುದಿಲ್ಲ ಎಂಬ ತಿದ್ದುಪಡಿಯಲ್ಲಿರುವ ನಿಬಂಧನೆಯನ್ನು ಈಗ ಜಾರಿಗೆ ತರಬಾರದು ಎಂದು ನ್ಯಾಯಾಲಯ ನಿರ್ದೇಶಿಸಿದೆ. ವಕ್ಫ್ ಮಂಡಳಿಗಳು ಮತ್ತು ಕೇಂದ್ರ ವಕ್ಫ್ ಮಂಡಳಿಯ ಎಲ್ಲಾ ಸದಸ್ಯರು, ಪದನಿಮಿತ್ತ ಸದಸ್ಯರನ್ನು ಹೊರತುಪಡಿಸಿ, ಮುಸ್ಲಿಮರಾಗಿರಬೇಕು ಎಂದು ನ್ಯಾಯಾಲಯವು ಪ್ರಸ್ತಾಪಿಸಿದೆ.
“ಸರಕಾರವೇನಾದರೂ ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳಲ್ಲಿ ಮುಸ್ಲಿಮರ ನೇಮಕಕ್ಕೆ ಅವಕಾಶ ನೀಡುತ್ತದೆಯೆ?” ಎಂದು ಕೇಂದ್ರ ಸರಕಾರವನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತು.ನೂತನ ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿನ ವಿವಿಧ ನಿಯಮಗಳು, ವಿಶೇಷವಾಗಿ ಬಳಕೆದಾರರ ಆಸ್ತಿಯನ್ನು ಬಳಸಿಕೊಳ್ಳುವ ವಕ್ಫ್ಗೆ ರೂಪಿಸಲಾಗಿರುವ ನಿಯಮಗಳ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಕಠಿಣ ಪ್ರಶ್ನೆಗಳನ್ನು ಒಡ್ಡಿತು.
ಕೇಂದ್ರ ಸರ್ಕಾರದ ವಾದಗಳನ್ನು ಆಲಿಸಿದ ನಂತರ ಅರ್ಜಿಗಳ ಕುರಿತು ಅಂತಿಮ ತೀರ್ಪು ನಾಳೆ ಪ್ರಕಟವಾಗಲಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಸಂಜಯ್ ಕುಮಾರ್ ಮತ್ತು ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಅರ್ಜಿಗಳನ್ನು ಪರಿಗಣಿಸಿತು.
ಸುಪ್ರೀಂ ಕೋರ್ಟ್ ಇಂದು ಮಧ್ಯಾಹ್ನ ಪ್ರಕರಣದ ವಿಚಾರಣೆಯನ್ನು ಪ್ರಾರಂಭಿಸಿತು. ವಕ್ಫ್ ತಿದ್ದುಪಡಿ ಕಾಯ್ದೆಗೆ ತಡೆ ನೀಡುವ ಆಧಾರದಲ್ಲಿ ಯಾವುದೇ ಅರ್ಜಿಗಳ ವಿಚಾರಣೆ ನಡೆಸುತ್ತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಸ್ಪಷ್ಟಪಡಿಸಿದ್ದಾರೆ. ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಲಾಗಲಿ ಅಥವಾ ಅವುಗಳ ಕುರಿತು ನಿರ್ಧಾರ ಕೈಗೊಳ್ಳಲಾಗಲಿ ಸುಪ್ರೀಂ ಕೋರ್ಟ್ಗೆ ಯಾವುದೇ ನಿರ್ಬಂಧಗಳಿಲ್ಲ ಎಂದೂ ಅವರು ಹೇಳಿದರು.
ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಅರ್ಜಿ ಸಲ್ಲಿಸಿರುವ ಅರ್ಜಿದಾರರ ಪರ ನ್ಯಾಯಾಲಯದಲ್ಲಿ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ವಕ್ಫ್ ತಿದ್ದುಪಡಿ ಕಾಯ್ದೆಯು ದೇಶವ್ಯಾಪಿ ಪರಿಣಾಮ ಹೊಂದಿದ್ದು, ಹೀಗಾಗಿ, ಈ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಹೈಕೋರ್ಟ್ಗಳಿಗೆ ಶಿಫಾರಸು ಮಾಡಬಾರದು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು. ಆದರೆ, ಈ ಮನವಿಯನ್ನು ತಳ್ಳಿ ಹಾಕಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ಎಲ್ಲ ಅರ್ಜಿಗಳ ವಿಚಾರಣೆ ನಡೆಸುವಂತೆ ಒಂದು ಹೈಕೋರ್ಟ್ಗೆ ಸೂಚಿಸಬಹುದಾಗಿದೆ ಎಂದು ಅಭಿಪ್ರಾಯ ಪಟ್ಟರು. ಸುಪ್ರೀಂ ಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.