ಹುಬ್ಬಳ್ಳಿ : ಪ್ರಯಾಣಿಕರು ಇರುವಾಗಲೇ KSRTC ಬಸ್ ಅನ್ನು ಮಾರ್ಗ ಮಧ್ಯೆ ನಿಲ್ಲಿಸಿ ಬಸ್ ನಲ್ಲೇ ನಮಾಜ್ ಮಾಡಿದ್ದ ಚಾಲಕನನ್ನು ಅಮಾನತು ಮಾಡಲಾಗಿದೆ. ಏಪ್ರಿಲ್ 29ರಂದು ಹುಬ್ಬಳ್ಳಿಯಿಂದ ಹಾವೇರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಬಸ್ ಚಾಲಕ ಕಮ್ ನಿರ್ವಾಹಕ ಎಆರ್ ಮುಲ್ಲಾ ಬಸ್ ನಲ್ಲೇ ನಮಾಜ್ ಮಾಡುತ್ತಿರುವ ವಿಡಿಯೊವನ್ನು ಪ್ರಯಾಣಿಕರೊಬ್ಬ ತನ್ನ ಮೊಬೈಲ್ ನಲ್ಲಿ ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದನು.
ಈ ಘಟನೆ ನಂತರ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಹ ತನಿಖೆಗೆ ಆದೇಶಿಸಿದ್ದರು. ಇದೀಗ ಹಾನಗಲ್ KSRTC ಘಟಕದ ಚಾಲಕ ನಯಾಜ್ ಮುಲ್ಲಾನನ್ನು ಕರ್ತವ್ಯಲೋಪ ಅಡಿಯಲ್ಲಿ ಕೆಲಸದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಏಪ್ರಿಲ್ 29ರಂದು ಸಂಜೆ ಹುಬ್ಬಳ್ಳಿಯಿಂದ ಹಾವೇರಿಗೆ ಹೋಗುವ ಬಸ್ ನ್ನು ಚಾಲಕ-ಕಂ-ನಿರ್ವಾಹಕ ಎಆರ್ ಮುಲ್ಲಾ ಮಾರ್ಗ ಮಧ್ಯೆ ನಿಲ್ಲಿಸಿ ನಮಾಜ್ ಮಾಡಿದ್ದಾರೆ. ಚಾಲಕ-ಕಂ-ನಿರ್ವಾಹಕ ನಮಾಜ್ ಮಾಡುತ್ತಿರುವುದನ್ನು ಪ್ರಯಾಣಿಕರೊಬ್ಬ ಮೊಬೈಲ್ ಕ್ಯಾಮೆರಾದಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ. ಈ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದ್ದಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ ಎಂ. ಅವರಿಗೆ ಪತ್ರ ಬರೆದು ತನಿಖೆಗೆ ಆದೇಶಿಸಿದ್ದರು.
ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಕೆಲವೊಂದು ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕಾಗಿರುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿದ್ದರೂ ಸಹ ಸಾರ್ವಜನಿಕ ಸೇವೆಯಲ್ಲಿರುವವರು, ಕರ್ತವ್ಯದ ವೇಳೆ ಹೊರತುಪಡಿಸಿ ತಮ್ಮ ತಮ್ಮ ಧರ್ಮವನ್ನು ಪಾಲಿಸಬಹುದಾಗಿರುತ್ತದೆ. ಆದರೆ, ಕರ್ತವ್ಯದ ಸಮಯದಲ್ಲಿ ಮಾರ್ಗ ಮಧ್ಯದಲ್ಲಿ ಬಸ್ ಅನ್ನು ನಿಲ್ಲಿಸಿ, ಬಸ್ನಲ್ಲಿ ಪ್ರಯಾಣಿಕರು ಇದ್ದಾಗ್ಯೂ ಸಹ ನಮಾಜ್ ಮಾಡಿರುವುದು ಆಕ್ಷೇಪಾರ್ಹ. ಈ ವಿಡಿಯೋ ಬಗ್ಗೆ ಕೂಡಲೇ ತನಿಖೆ ನಡೆಸಿ, ಸಂಬಂಧಪಟ್ಟ ಸಿಬ್ಬಂದಿಯು ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಸೂಕ್ತ ಶಿಸ್ತಿನ ಕ್ರಮ ಜರುಗಿಸಿ. ಇನ್ನು ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಿ ಎಂದು ಸೂಚನೆ ನೀಡಿದ್ದಾರೆ.
ಚಾಲಕ ಚಿನ್ನದ ಪದಕ ವಿಜೇತ
ಬಸ್ ಚಾಲಕ ನಯಾಜ್ ಮುಲ್ಲಾ ಹಾನಗಲ್ – ವಿಶಾಲಘಡ ಮಾರ್ಗದಲ್ಲಿ ಹಲವಾರು ವರ್ಷಗಳಿಂದ ಚಾಲಕ ಹಾಗೂ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅನೇಕ ವರ್ಷಗಳಿಂದ ಅಪಘಾತ ರಹಿತ ಚಾಲನೆಗಾಗಿ ಚಿನ್ನದ ಪದಕ ಪಡೆದಿದ್ದರು.
ಸರಕಾರೀ ಬಸ್ ನಲ್ಲಿ ಧಾರ್ಮಿಕ ಆಚರಣೆ ಸರಿಯಲ್ಲ
ಪ್ರಯಾಣಿಕರಿಂದ ತುಂಬಿದ್ದ ಬಸ್ ನಿಲ್ಲಿಸಿ ನಮಾಜ್ ಮಾಡಿದ ನಯಾಜ್ ಮುಲ್ಲಾ ವಿರುದ್ಧ ಹಲವಾರು ಜನ ಆಕ್ರೋಶ ವ್ಯಕ್ತಪಡಿಸಿದ್ದರು. ಸಾರ್ವಜನಿಕರಿಗಾಗಿ ಇರುವ ಬಸ್ನಲ್ಲಿ ನಮಾಜ್ ಮಾಡಿರುವುದು ಸರಿಯಲ್ಲ.
ಅದೇ ರೀತಿ, ಪೂಜೆ, ಹೋಮ, ಹವನಗಳನ್ನು ಮಾಡುವುದು ಸಹ ಸರಿಯಲ್ಲ. ಇಂತಹ ಆಚರಣೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನೆಟ್ಟಿಗರು ಆಗ್ರಹಿಸಿದ್ದರು.







