ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ದುಷ್ಕರ್ಮಿಗಳ ಗುಂಪೊಂದು ಯುವಕರಿಬ್ಬರ ಮೇಲೆ ತಲವಾರು ದಾಳಿ ನಡೆಸಿದ್ದು, ಓರ್ವ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಅಡ್ಡೂರು ಕೊಲ್ತಮಜಲು ಎಂಬಲ್ಲಿ ನಡೆದಿದೆ.
ಕೊಲ್ತಮಜಲು ಬೆಲ್ಲೂರು ನಿವಾಸಿ ಪಿಕಪ್ ವಾಹನ ಚಾಲಕ ಅಬ್ದುಲ್ ರಹ್ಮಾನ್ ಎಂಬವರನ್ನು ಕೊಲೆ ಮಾಡಲಾಗಿದೆ. ಇವರು ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಪರಾರಿಯಾಗಿದ್ದಾರೆ. ಅಬ್ದುಲ್ ರಹ್ಮಾನ್ ಜೊತೆಗಿದ್ದ ಕಲಂದರ್ ಶಾಫಿ ಮೇಲೂ ದಾಳಿ ನಡೆದಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ರಾಜ್ಯ ಸರ್ಕಾರ ನೇರ ಹೊಣೆ
ದಕ್ಷಿಣ ಕನ್ನಡದಲ್ಲಿ ಇತ್ತೀಚೆಗೆ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ವಿವಿಧ ಕಡೆಗಳಲ್ಲಿ ಅಮಾಯಕ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹತ್ಯೆ ಯತ್ನಗಳು ನಡೆದಿದ್ದು, ದುಷ್ಕರ್ಮಿಗಳ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಇತ್ತೀಚೆಗೆ ಬಜ್ಪೆ ಚಲೋ ಎಂಬ ಹೆಸರಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಬಿಗಿದ ಪರಿಣಾಮ ಇಂದು ಅಮಾಯಕ ಮುಸ್ಲಿಂ ಯುವಕನ ಹತ್ಯೆ ನಡೆದಿದೆ ಎಂದು ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರಾವಳಿಯಲ್ಲಿ ಭುಗಿಲೆದ್ದಿರುವ ಕೋಮು ಸಂಘರ್ಷವನ್ನು ಹತೋಟಿಗೆ ತರುವಲ್ಲಿ ರಾಜ್ಯದ ಗೃಹ ಇಲಾಖೆಯು ಸಂಪೂರ್ಣ ವಿಫಲವಾಗಿದೆ. ಪ್ರಚೋದನಕಾರಿ ಭಾಷಣ ಬಿಗಿಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕರಾವಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾನ್ಯ ಗೃಹ ಸಚಿವರು ಭರವಸೆ ನೀಡಿದ್ದರು.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಮು ಸಂಘರ್ಷವನ್ನು ತಪ್ಪಿಸಲು ಒಂದು ಆಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಅನ್ನು ರಚಿಸಲಾಗುವುದು. ಯಾರು ಕಮ್ಯೂನಲ್ ಚಟುವಟಿಕೆಗಳನ್ನು ಮಾಡುತ್ತಾರೋ, ಅವರಿಗೆ ಸಪೋರ್ಟ್ ಮಾಡುತ್ತಾರೋ ಹಾಗೂ ಪ್ರಚೋದನಕಾರಿ ಭಾಷಣ ಮಾಡುತ್ತಾರೋ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಕ್ಕೆ ಈ ಪಡೆಯ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದ್ದರು.
ಕರಾವಳಿ ಜಿಲ್ಲೆಗಳಲ್ಲಿ ಶಾಂತಿಯನ್ನು ಕಾಪಾಡುವ ಉದ್ದೇಶದಿಂದ ಈ ಕಾರ್ಯಪಡೆಯನ್ನು ರಚಿಸಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ರಾಜ್ಯದಲ್ಲಿ ಯಾರು ಪ್ರಚೋದನೆ ಭಾಷಣಗಳನ್ನು ಮಾಡುತ್ತಾರೋ ಅಂಥವರ ಮೇಲೆ ಕಾನೂನು ಪ್ರಕಾರನ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದಕ್ಕೆ ಸೂಚನೆ ನೀಡಲಾಗಿದೆ ಎಂದಿದ್ದರು. ಆದರೆ, ಅವರ ಹೇಳಿಕೆಯು ಕೇವಲ ಹೇಳಿಕೆಯಾಗಿ ಉಳಿದಿದೆ ವಿನಃ ಯಾವುದೂ ಕಾರ್ಯರೂಪಕ್ಕೆ ಬಂದಿಲ್ಲ. ಪ್ರಚೋದನಕಾರಿ ಭಾಷಣ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ. ಮುಸ್ಲಿಮರ ವಿರುದ್ಧ ಬಹಿರಂಗ ಕೊಲೆಗೆ ಆಹ್ವಾನ ನೀಡುತ್ತಿರುವವರು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ಅವರನ್ನು ಹದ್ದುಬಸ್ತಿನಲ್ಲಿಡಲು ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗದೇ ಇರುವುದು ನಿಜಕ್ಕೂ ಖೇದಕರ ಸಂಗತಿಯಾಗಿದೆ ಎಂದು ಜಿಲ್ಲೆಯ ಸಮಾನ ಮನಸ್ಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.







